ಯಾದಗಿರಿ ಜಿಲ್ಲೆಯ ಸುರಪುರ ನಗರದ ವಡ್ಡರ ಓಣಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಧ್ಯಾಹ್ನದ ಬಿಸಿ ಊಟದಲ್ಲಿ ಹಲ್ಲಿ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ.
ಮಕ್ಕಳು ಊಟ ಸೇವಿಸುತ್ತಿದ್ದ ವೇಳೆ ಪಾತ್ರೆಯಲ್ಲಿ ಹಲ್ಲಿ ಕಂಡುಬಂದಿದ್ದು, ಇದರಿಂದ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ಧಾವಿಸಿ, ಶಿಕ್ಷಕರು ಹಾಗೂ ಅಡುಗೆ ಸಹಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆಯಲ್ಲಿ ಒಟ್ಟು 42 ಮಕ್ಕಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಮಕ್ಕಳನ್ನೂ ಹಸನಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ನಡೆಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸುರಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ಅಕ್ರಮ ಹಾಗೂ ಅನಧಿಕೃತ ವಸತಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕತ್ತೆಗಳ ಮೆರವಣಿಗೆ
ಆಸ್ಪತ್ರೆಗೆ ತಾಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ. ನಾಯಕ ಭೇಟಿ, ಒಂದು ಮಗುವಿಗೆ ಮಾತ್ರ ವಾಂತಿ ಕಾಣಿಸಿಕೊಂಡಿದ್ದು, ಉಳಿದ ಯಾವುದೇ ಮಕ್ಕಳಿಗೆ ತೊಂದರೆ ಕಂಡುಬಂದಿಲ್ಲ. ಎಲ್ಲಾ ಮಕ್ಕಳ ಆರೋಗ್ಯವಾಗಿ ಇದ್ದರೆ ಎಂದು ತಿಳಿಸಿದ್ದಾರೆ.
ಅಡುಗೆ ತಯಾರಿಸುವ ಸಂದರ್ಭದಲ್ಲಿ ಅಡುಗೆ ಸಹಾಯಕಿಯರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿರಬಹುದು. ಇದರ ಬಗ್ಗೆ ಸಮಗ್ರ ತನಿಖೆ ಮಾಡಲಾಗುವುದು ಎಂದರು.





