ಕೆಂಭಾವಿ ಪಟ್ಟಣದ ಪುರಸಭೆ ಆವರಣದಲ್ಲಿ ಸೋಮವಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ 6 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಮತ್ತು ವಿದ್ಯುದೀಕರಣ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಅಡಿಗಲ್ಲು ಪೂಜೆ ನೆರವೇರಿಸಿದರು.
ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು ನುಡಿದಂತೆ ನಡೆದುಕೊಳ್ಳುತ್ತಿದೆ ಎಂದು ಹೇಳಿದರು. ನಮ್ಮ ಸರ್ಕಾರ ಇರುವವರೆಗೆ ಗ್ಯಾರಂಟಿ ಯೋಜನೆಗಳು ನಿರಂತರವಾಗಿ ಮುಂದುವರಿಯುತ್ತವೆ. ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರದಿಂದ ಅಕ್ಕಿ ಪೂರೈಕೆಯಲ್ಲಿ ಸಹಕಾರ ಸಿಗದಿದ್ದರೂ, ರಾಜ್ಯ ಸರ್ಕಾರ ಡಿಬಿಟಿ ಮೂಲಕ ಹಣ ಜಮಾ ಮಾಡುತ್ತಿದೆ. ಐದು ಗ್ಯಾರಂಟಿ ಯೋಜನೆಗಳು ಜಾತಿ-ಭೇದವಿಲ್ಲದೆ ಎಲ್ಲ ವರ್ಗದ ಜನರಿಗೆ ತಲುಪುತ್ತಿವೆ,’ ಎಂದು ತಿಳಿಸಿದರು.
‘ಇಂದಿರಾ ಕಿಟ್ ಯೋಜನೆ ಕುರಿತು ಮಾತನಾಡಿದ ಅವರು, ಅಕ್ಕಿಯ ಬದಲಾಗಿ ಬೇಳೆ, ಸಕ್ಕರೆ, ಉಪ್ಪು ಮತ್ತು ಎಣ್ಣೆ ಒಳಗೊಂಡ ಕಿಟ್ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆಯಾಗಿದ್ದು, ಶೀಘ್ರದಲ್ಲೇ ಜಾರಿಗೆ ತರಲಾಗುವುದು’ ಎಂದರು.

‘ಕೆಂಭಾವಿ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 48 ಕೋಟಿ ರೂ. ವೆಚ್ಚದಲ್ಲಿ ಮೂರು ಓವರ್ಹೆಡ್ ಟ್ಯಾಂಕ್ಗಳು ಹಾಗೂ ಪೈಪ್ಲೈನ್ ಅಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೆ. 4,050 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದೆ. ಇನ್ನೂ ಕ್ರಾಸ್ನಿಂದ ಕೆಂಭಾವಿ ರಸ್ತೆ ಕಾಮಗಾರಿಗೆ 5 ಕೋಟಿ ರೂ. ಮತ್ತು 7 ಕೋಟಿ ರೂ. ವೆಚ್ಚದ ಕೆಲಸಗಳು ಪ್ರಗತಿಯಲ್ಲಿದ್ದು, ಕೆಂಭಾವಿಯಿಂದ ತಿಪನಟಗಿ ಕ್ರಾಸ್ ವರೆಗೆ 8 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿ ಟೆಂಡರ್ ಪ್ರಕ್ರಿಯೆಯಲ್ಲಿದೆ’ ಎಂದು ಸಚಿವರು ವಿವರಿಸಿದರು.
‘ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಆಗ ಮಾತ್ರ ಜನಪ್ರತಿನಿಧಿಗಳಿಗೆ ಒಳ್ಳೆಯ ಹೆಸರು ಬರುತ್ತದೆ,’ ಎಂದು ಸೂಚಿಸಿದರು. ಮಂದಿರ, ಮಸೀದಿ ಹಾಗೂ ಸಮುದಾಯ ಭವನಗಳ ಅಭಿವೃದ್ಧಿಗೆ ಶಕ್ತಿಮೀರಿ ಅನುದಾನ ತರಲಾಗಿದೆ ಎಂದರು.
ಇದನ್ನು ಓದಿದ್ದೀರಾ? ಕಲಬುರಗಿ | ಬೈಕ್, ಟ್ರಾಕ್ಟರ್ ಅಪಘಾತ; ಪ್ರಾಣಾಪಾಯದಿಂದ ಪಾರಾದ ಯುವಕರು
ಈ ಸಂದರ್ಭದಲ್ಲಿ ಬಸನಗೌಡ ಹೊಸಮನಿ, ಶಿವಮಾಂತ ಚಂದಾಪೂರ, ಸಿದ್ದನಗೌಡ ಪಾಟೀಲ್, ಬಾಪುಗೌಡ ಪಾಟೀಲ್, ವಾಮನರಾವ್ ದೇಶಪಾಂಡೆ, ಖಾಜಾಪಟೇಲ್ ಕಾಚೂರ, ಪುರಸಭೆ ಅಧ್ಯಕ್ಷೆ ಪ್ರೀಯಾ ರಾಮನಗೌಡ ಪಾಟೀಲ್, ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಕಂಬಾರ ಸೇರಿದಂತೆ ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.





