ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ಚಟ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಮಕಲ್ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ತೆರಳಿದ್ದ ಬಡ ರೈತರು ಹಾಗೂ ಕೂಲಿ ಕಾರ್ಮಿಕರು ಗುರುವಾರ ಪರಸ್ಪರ ಸಿಹಿ ಹಂಚಿಕೊಂಡು ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಿದರು.
ಈ ವೇಳೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಮಾತನಾಡಿ, ‘ಉದ್ಯೋಗ ಖಾತ್ರಿ ಕಾಯ್ದೆಯನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾಯಿಸಲು ಮುಂದಾಗಿರುವುದು ಖಂಡನೀಯ ಉದ್ಯೋಗ ಖಾತ್ರಿ ಕಾಯ್ದೆಯನ್ನು ಹಾಳುಮಾಡುವ ಯಾವುದೇ ಪ್ರಯತ್ನಕ್ಕೂ ಅವಕಾಶ ನೀಡುವುದಿಲ್ಲ’ ಎಂದು ಎಚ್ಚರಿಸಿದರು.
‘ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಬೀಗ ಜಡೆಯುವ ಮೂಲಕ ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಬಹುದು ಎಂದು ಎಚ್ಚರಿಕೆ ನೀಡಿದ ಅವರು, ಕೇಂದ್ರ ಸರ್ಕಾರದ ನೀತಿಗಳು ರೈತ ವಿರೋಧಿ, ಕಾರ್ಮಿಕ ವಿರೋಧಿ ಹಾಗೂ ಬಡವರ ವಿರೋಧಿಯಾಗಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ
ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಉಪಾಧ್ಯಕ್ಷ ವಿಜಯಕುಮಾರ್ ದೊಡ್ಮನಿ, ತಾಲೂಕು ಸಂಘಟನಾ ಕಾರ್ಯದರ್ಶಿ ಮರಿಯಪ್ಪ ಹಲಗೇರಿ, ತಾಲೂಕು ಯುವ ಮುಖಂಡ ಹಣಮಂತ ಯಕ್ಷಂತಿ, ರೇಣುಕಾ ಭೀಮರಾಯ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.





