ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಸಾವಿರಾರು ಬಡ ಕಾರ್ಮಿಕರ ಹಿತಾಸಕ್ತಿಯನ್ನು ಕಡೆಗಣಿಸಿರುವ ಕಾರ್ಮಿಕ ಇಲಾಖೆಯ ವಿರುದ್ಧ ನಮ್ಮ ಕರ್ನಾಟಕ ಸೇನೆಯ ಕಾರ್ಮಿಕ ಘಟಕ ಅಧ್ಯಕ್ಷ ಗುರುರಾಜ ಎಸ್. ಅಂಗಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ‘ಸ್ಮಾರ್ಟ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದಿದ್ದರೂ ಕೆಂಭಾವಿ ಭಾಗದ ಕಾರ್ಮಿಕರಿಗೆ ಕಾರ್ಡ್ ವಿತರಣೆ ಮಾಡಲಾಗಿಲ್ಲ. ಇದರ ಪರಿಣಾಮವಾಗಿ ಬಡ ಕಾರ್ಮಿಕರು ಸರ್ಕಾರದ ವಿವಿಧ ಕಾರ್ಮಿಕ ಕಲ್ಯಾಣ ಯೋಜನೆಗಳ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.
‘ಹೋಬಳಿ ಮಟ್ಟದ ಕಾರ್ಮಿಕರು ಮಾಹಿತಿ ಪಡೆಯಲು ಕಚೇರಿಗಳಿಗೆ ತೆರಳಿದಾಗ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡದೇ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟಕ್ಕೆ ಹೋಗುವಂತೆ ಸೂಚಿಸುತ್ತಿರುವುದು ಕಾರ್ಮಿಕರಿಗೆ ಹೆಚ್ಚುವರಿ ತೊಂದರೆ ಉಂಟುಮಾಡುತ್ತಿದೆ. ಇದರಿಂದ ಕಾರ್ಮಿಕರು ಕಚೇರಿಗಳ ಸುತ್ತ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ತಿಳಿಸಿದ್ದಾರೆ.
‘ಕೆಂಭಾವಿ ಹೋಬಳಿಗೆ ಸಿಗಬೇಕಾದ ಕಾರ್ಮಿಕ ಕಲ್ಯಾಣ ಸೌಲಭ್ಯಗಳನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗುತ್ತಿದೆ. ಸರ್ಕಾರದ ಕಾರ್ಮಿಕ ಕಲ್ಯಾಣ ನಿಧಿ ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಶೈಕ್ಷಣಿಕ ಧನಸಹಾಯ, ವೈದ್ಯಕೀಯ ನೆರವು ಸೇರಿದಂತೆ ಹಲವು ಸೌಲಭ್ಯಗಳಿಂದ ಕಾರ್ಮಿಕರ ಕುಟುಂಬಗಳು ವಂಚಿತವಾಗಿವೆ’ ಎಂದು ಅವರು ಹೇಳಿದ್ದಾರೆ.
‘ಅಧಿಕಾರಿಗಳು ತಮ್ಮ ಮಲತಾಯಿ ಧೋರಣೆಯನ್ನು ತಕ್ಷಣವೇ ಬಿಟ್ಟು ಕೆಂಭಾವಿ ಹೋಬಳಿಯ ಪ್ರತಿಯೊಬ್ಬ ಅರ್ಹ ಕಾರ್ಮಿಕನಿಗೂ ಸ್ಮಾರ್ಟ್ ಕಾರ್ಡ್ ವಿತರಿಸಬೇಕು. ಜೊತೆಗೆ ಸ್ಥಳೀಯ ಮಟ್ಟದಲ್ಲಿ ಮಾಹಿತಿ ಕೇಂದ್ರಗಳನ್ನು ತೆರೆಯಬೇಕು’ ಎಂದು ಒತ್ತಾಯಿಸಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಮಹಿಳೆ–ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಕಠಿಣ ಕಾನೂನು ಕ್ರಮಕ್ಕೆ ಎಐಎಂಎಸ್ಎಸ್ ಆಗ್ರಹ
‘ಒಂದು ವಾರದೊಳಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೆ ನಮ್ಮ ಕರ್ನಾಟಕ ಸೇನೆಯ ವತಿಯಿಂದ ಕೆಂಭಾವಿ ಬಂದ್ ಕರೆ ನೀಡಿ ಕಾರ್ಮಿಕ ಇಲಾಖೆಯ ಕಚೇರಿಗೆ ಬೀಗ ಜಡಿಯುವ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.





