ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರವನ್ನು ಕೂಡಲೇ ಸ್ವಚ್ಛಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಸೇನೆ ಮುಖಂಡರು ಮಂಗಳವಾರ ವೈದ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಸಮುದಾಯ ಆರೋಗ್ಯ ಕೇಂದ್ರದಿಂದ ಹೊರಬರುವ ಕಲುಷಿತ ನೀರು ಯಾವುದೇ ಸಂಸ್ಕರಣೆ ಇಲ್ಲದೆ ಸಾರ್ವಜನಿಕ ಚರಂಡಿಗಳಿಗೆ ಹರಿಯುತ್ತಿದ್ದು, ಇದರಿಂದ ಸ್ಥಳೀಯ ನಿವಾಸಿಗಳ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಕರ್ನಾಟಕ ಸೇನೆಯ ಕೆಂಭಾವಿ ಹೋಬಳಿ ಕಾರ್ಮಿಕ ಘಟಕ ಆರೋಪಿಸಿದೆ.
ಮನವಿ ಸಲ್ಲಿಸಿ ಕರ್ನಾಟಕ ಸೇನೆಯ ಅಧ್ಯಕ್ಷ ಗುರುರಾಜ ಎಸ್. ಅಂಗಡಿ ಮಾತನಾಡಿ, ‘ಕೆಂಭಾವಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವ್ಯಾಪಕ ಅಸ್ವಚ್ಛತೆ, ಆಸ್ಪತ್ರೆಯಿಂದ ಹೊರಬರುವ ಕಲುಷಿತ ನೀರು ಹಾಗೂ ಮಲ–ಮೂತ್ರ ವಿಸರ್ಜನೆಯು ನೇರವಾಗಿ ಸಾರ್ವಜನಿಕ ಚರಂಡಿಗಳಿಗೆ ಸೇರುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದೆ. ಈ ಸಮಸ್ಯೆಯನ್ನು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ವಚ್ಛತೆಯ ಜವಾಬ್ದಾರಿ ಹೊತ್ತಿರುವ ಗುತ್ತಿಗೆದಾರರು ಹಾಗೂ ಸಿಬ್ಬಂದಿಗಳ ನಿಷ್ಕಾಳಜಿಯಿಂದ ಆಸ್ಪತ್ರೆಯ ಸುತ್ತಮುತ್ತಲಿನ ಪರಿಸರ ದಿನೇದಿನೇ ಅಪಾಯಕಾರಿಯಾಗಿ ಮಾರ್ಪಡುತ್ತಿದೆ ಎಂದು ಆರೋಪಿಸಿದ ಅವರು, ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಬೇಕು. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿಗಳು ಹಾಗೂ ವಿಫಲ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಆಸ್ಪತ್ರೆಯ ಕಲುಷಿತ ನೀರು ಸುರಕ್ಷಿತವಾಗಿ ಹರಿದು ಹೋಗಲು ಶಾಶ್ವತ ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಸರ್ಕಾರಿ ಶಾಲೆಯ ಶಿಕ್ಷಕಿಯಿಂದ ಹಲ್ಲೆ ಆರೋಪ: ವಿದ್ಯಾರ್ಥಿಗೆ ಗಾಯ
ಒಂದು ವೇಳೆ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ಸಾರ್ವಜನಿಕರೊಂದಿಗೆ ಸೇರಿ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ತೀವ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ನಾರಾಯಣ ಸ್ಯೂರವಂಶಿ, ಕೃಷ್ಣ ಮಾಸ್ಟರ್, ಸೋಮನಾಥ ಗೊಬ್ಯಾಡ್ ಸೇರಿದಂತೆ ಕರ್ನಾಟಕ ಸೇನೆಯ ಇತರ ಸದಸ್ಯರು ಉಪಸ್ಥಿತರಿದ್ದರು.





