ಸುರಪುರ ಹಾಗೂ ಶಹಾಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಅನಧಿಕೃತ ಹಾಗೂ ಅಧಿಕ ಭಾರದ ಮರಳು ಸಾಗಣೆ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ ನೇತೃತ್ವದಲ್ಲಿ ಕಠಿಣ ಕಾರ್ಯಾಚರಣೆ ನಡೆಸಲಾಗಿದ್ದು, ಮರಳು ತುಂಬಿದ 7 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಭೂವಿಜ್ಞಾನಿ ವೀರೇಶ ಶಾಂತಪ್ಪ ತಿಳಿಸಿದ್ದಾರೆ.
ಜಿಲ್ಲಾ ಮರಳು ನಿಯಂತ್ರಣ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರ ಸೂಚನೆಯಂತೆ ಈ ದಾಳಿ ನಡೆಸಲಾಗಿದೆ. ಸುರಪುರ, ಶಹಾಪುರ ತಾಲ್ಲೂಕುಗಳಲ್ಲಿ ಅನಧಿಕೃತ ಹಾಗೂ ಅಧಿಕ ಭಾರದ ಮರಳು ಸಾಗಣೆ ನಡೆಯುತ್ತಿದೆ ಎಂಬ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ರಾತ್ರಿ ಗಸ್ತು ನಡೆಸಿ ವಾಹನಗಳನ್ನು ಪರಿಶೀಲಿಸಿದ ಪರಿಣಾಮ 7 ಮರಳು ತುಂಬಿದ ವಾಹನಗಳನ್ನು ವಶಕ್ಕೆ ಪಡೆದು ಒಟ್ಟು ₹2.78 ಲಕ್ಷ ದಂಡ ವಿಧಿಸಲಾಗಿದೆ. ಜೊತೆಗೆ, ಸಂಬಂಧಿಸಿದ ವಾಹನಗಳ ನೋಂದಣಿಯನ್ನು ರದ್ದುಪಡಿಸುವಂತೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ಕಂಠಪೂರ್ತಿ ಮದ್ಯ ಕುಡಿಸಿ ಮುಖ್ಯ ಕಾಲುವೆಗೆ ತಳ್ಳಿ ಕೊಲೆ; ಪತ್ನಿ ದೂರು
ಜಿಲ್ಲೆಯಲ್ಲಿ ಅನಧಿಕೃತ ಹಾಗೂ ಅಧಿಕ ಭಾರದ ಮರಳು ಸೇರಿದಂತೆ ಇತರೆ ಉಪಖನಿಜಗಳ ಸಾಗಣೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮರಳು ನಿಯಂತ್ರಣ ಸಮಿತಿ ಸದಸ್ಯರನ್ನೊಳಗೊಂಡ ತಂಡಗಳನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ವಾಹನ ಪರಿಶೀಲನೆ ಹಾಗೂ ಕಠಿಣ ಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.





