ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣ ಮತ್ತು ಮಂಚಿಕೇರಿ ಪ್ರದೇಶಗಳಲ್ಲಿ ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿಕೊಂಡು ಹಗಲಿನಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಲ್ಲಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಸುಮಾರು ₹18.88 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಕೆಲ ತಿಂಗಳ ಹಿಂದೆ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಗಲು ಕಳ್ಳತನದ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಬೀಗ ಹಾಕಿ ಮನೆ ಬಿಟ್ಟಿರುವವರ ಒಂಟಿ ಮನೆಗಳನ್ನು ಗುರುತಿಸಿ, ಯಾರೂ ಇಲ್ಲದ ಸಮಯದಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯ ಚಟುವಟಿಕೆ ಪೊಲೀಸರ ಗಮನಕ್ಕೆ ಬಂದಿತ್ತು. ಪ್ರಕರಣಗಳು ದಾಖಲಾಗುತ್ತಿದ್ದಂತೆಯೇ, ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿದರು. ತನಿಖೆ ವೇಳೆ ಖಚಿತ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ, ಯಲ್ಲಾಪುರ ತಾಲೂಕಿನ ಮಡಿವಾಳಕೇರಿ ಹಾಸಣಗಿ ಗ್ರಾಮದ ನಿವಾಸಿ ಈಶ್ವರ ಮಂಜುನಾಥ ಸಿದ್ದಿ (32)ಯನ್ನು ಅಂಕೋಲಾ ತಾಲೂಕಿನ ಬಾಳೆಗುಳಿ ಕ್ರಾಸ್ ಬಳಿ ವಶಕ್ಕೆ ಪಡೆಯಲಾಯಿತು. ವಿಚಾರಣೆ ವೇಳೆ ಆರೋಪಿಯು ಯಲ್ಲಾಪುರ ಪ್ರದೇಶದಲ್ಲಿ ಹಗಲು ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.
ನ್ಯಾಯಾಲಯದ ಅನುಮತಿ ಪಡೆದು, ಈತನನ್ನು ಪೊಲೀಸ್ ಕಸ್ಟಡಿಗೆ ಒಳಪಡಿಸಲಾಯಿತು. ಬಂಧಿತ ಆರೋಪಿಯಿಂದ ಒಟ್ಟು 137 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದು, ಇದರ ಅಂದಾಜು ಮೌಲ್ಯ ₹18,08,400. ಜೊತೆಗೆ ಕೃತ್ಯಕ್ಕೆ ಬಳಸಿದ್ದ ₹80,000 ಮೌಲ್ಯದ ಡಿಯೋ ಸ್ಕೂಟಿಯನ್ನೂ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಶಿರಸಿ | ಮಳೆ ಬಂದರೆ ಹೊಂಡ, ಬಿಸಿಲಾದ್ರೆ ಧೂಳು: ಭೀಮಘರ್ಜನೆಯ ವಿಡಿಯೋ ವೈರಲ್
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮತ್ತು ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಇವರ ಮಾರ್ಗದರ್ಶನದಲ್ಲಿ, ಯಲ್ಲಾಪುರ ಪೊಲೀಸ್ ನಿರೀಕ್ಷಕ ರಮೇಶ ಎಚ್. ಹನಾಪುರ ಹಾಗೂ ಪಿಎಸ್ಐಗಳಾದ ರಾಜಶೇಖರ ವಂದಲಿ, ಮಹಾವೀರ ಡಿ. ಕಾಂಬಳೆ, ಸಿದ್ದಪ್ಪ ಗುಡಿ, ಶೇಡಜಿ ವಾಸು ಚವ್ಹಾಣ್ ಮತ್ತು ಸಿಬ್ಬಂದಿ ವರ್ಗ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪ್ರಕರಣ ಬೇಧಿಸಿದ ತಂಡದ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.





