ಸರಕಾರಿ ಕಚೇರಿಗಳಲ್ಲಿ ಅಧಿಕಾರಿ-ಸಿಬ್ಬಂದಿಗಳು ಬಯೋ ಮೆಟ್ರಿಕ್ ಮೂಲಕ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸುವಂತೆ ಹಾಗೂ ನಿಗದಿತ ಸಮಯಕ್ಕೆ ಹಾಜರಾಗಿ ಸಾರ್ವಜನಿಕರ ಕೆಲಸಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.
ಅವರು ಮಂಡ್ಯ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರು ಆಗಸ್ಟ್ 2 ರಂದು ಇಲಾಖಾ ವಿಷಯಗಳ ಕುರಿತು ಪ್ರಗತಿ ಪರಿಶೀಲಿಸಲು ಎಲ್ಲಾ ಜಿಲ್ಲಾ ಪಂಚಾಯತ್ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳೊಂದಿಗೆ ಪೂರ್ವಭಾವಿಯಾಗಿ ಸಭೆ ನಡೆಸಿದರು.
ಗ್ರಾಮ ಪಂಚಾಯತ್ಗಳ ತೆರಿಗೆ ವಸೂಲಾತಿ, ಆಸ್ತಿಗಳ ಸಮೀಕ್ಷೆ, ಇ-ಸ್ವತ್ತು ಮತ್ತು ಐ.ಪಿ.ಜಿ.ಆರ್.ಎಸ್. ಅರ್ಜಿಗಳ ವಿಲೇವಾರಿ ಮಾಹಿತಿ ಪಡೆದು ಆದ್ಯತೆ ಮೇರೆಗೆ ಕಾಲಮಿತಿಯೊಳಗೆ ಇ-ಸ್ವತ್ತು ಹಾಗೂ ಸಾರ್ವಜನಿಕ ಕುಂದು ಕೊರತೆ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಡಿಜಿಟಲ್ ಗ್ರಂಥಾಲಯಗಳ ನಿರ್ವಹಣೆ, ಇಲಾಖಾ ವಿಚಾರಣೆ ವಿವರ, 14 ಮತ್ತು 15ನೇ ಹಣಕಾಸಿನ ಪ್ರಗತಿ ಪರಿಶೀಲಿಸಿದರು.
ಕಾವೇರಿ ಹಾಗೂ ಹೇಮಾವತಿ ನದಿ ಪಾತ್ರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ಸದರಿ ನದಿಗಳ ಪಾತ್ರದಲ್ಲಿ ಬರುವ ಗ್ರಾಮ ಪಂಚಾಯತ್ಗಳಲ್ಲಿ ವಿಪತ್ತು ನಿರ್ವಹಣೆ ಸಂಬಂಧ ಅಗತ್ಯ ಕ್ರಮವಹಿಸುವಂತೆ ಈಗಾಗಲೇ ಸೂಚಿಸಲಾಗಿದ್ದು, ಅದರಂತೆ ಪ್ರವಾಹ ಪರಿಸ್ಥಿತಿ ಕಡಿಮೆಯಾಗುವವರೆಗೂ ಸಹ ನದಿ ಪಾತ್ರದ ಗ್ರಾಮ ಪಂಚಾಯತ್ಗಳಲ್ಲಿ ಎಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವಂತೆ ಪಿ.ಡಿ.ಓ.ಗಳಿಗೆ ನಿರ್ದೇಶನ ನೀಡುವಂತೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.

ಮಹಾತ್ಮಗಾಂಧಿ ನರೇಗಾ ಯೋಜನೆ, ಜಲ ಜೀವನ್ ಮಿಷನ್ ಯೋಜನೆ, ಸ್ವಚ್ಛ ಭಾರತ್ ಮಿಷನ್(ಗ್ರಾ), ಬಾಪೂಜಿ ಸೇವಾ ಕೇಂದ್ರದ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲಿಸಿ ನಿಗಧಿತ ಅವಧಿಯಲ್ಲಿ ಪ್ರಗತಿ ಸಾಧಿಸಲು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳ ಹಂತದಲ್ಲಿ ಗ್ರಾ.ಪಂ. ಪಿ.ಡಿ.ಓ.ಗಳ ಸಭೆಯನ್ನು ಮಾನ್ಯ ಸಚಿವರ ನಿರ್ದೇಶನದಂತೆ ಪ್ರತಿ ತಿಂಗಳ 4ನೇ ತಾರೀಖಿನಂದು ಸಭೆ ನಡೆಸಿ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿವಾರು ಪ್ರಗತಿ ಪರಿಶೀಲಿಸಿ, ಸಭಾ ನಡವಳಿ ಹಾಗೂ ಅನುಷ್ಠಾನ ವರದಿಯನ್ನು ಎರಡು ದಿನಗಳೊಳಗಾಗಿ ಸಲ್ಲಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ನ ಯೋಜನಾ ನಿರ್ದೇಶಕ ಸಂಜೀವಪ್ಪ, ಉಪ ಕಾರ್ಯದರ್ಶಿಗಳಾದ ಆನಂದ್, ಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.





