2026-27ರ ಆರ್ಥಿಕ ವರ್ಷಕ್ಕೆ ಬಜೆಟ್ ಮಂಡಿಸಲು ಕೇಂದ್ರ ಸರ್ಕಾರ ಸಿದ್ದತೆ ನಡೆಸಿದೆ. ಇಂದಿನಿಂದ (ಜ.28) ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ.
ಅಧಿವೇಶನವು ಇಂದಿನಿಂದ ಏಪ್ರಿಲ್ 2ರವರೆಗೆ ಎರಡು ಹಂತಗಳಲ್ಲಿ ನಡೆಯಲಿದೆ. ಫೆಬ್ರವರಿ 1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಅವರ ಬಜೆಟ್ ಮಂಡನೆಯೊಂದಿಗೆ ಫೆಬ್ರವರಿ 13ರವರೆಗೆ ಮೊದಲ ಹಂತದ ಅಧಿವೇಶನ ನಡೆಯಲಿದೆ. ಬಳಿಕ, ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ಎರಡನೇ ಹಂತದ ಅಧಿವೇಶನ ನಡೆಯಲಿದೆ. ಎರಡನೇ ಹಂತದ ವೇಳೆ, ಬಜೆಟ್ ಕುರಿತು ಗಂಭೀರ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ.
ಅಧಿವೇಶನದಲ್ಲಿ ಮನರೇಗಾ ಮತ್ತು ಎಸ್ಐಆರ್ ಸಮಸ್ಯೆಗಳ ಕುರಿತು ಚರ್ಚೆಯನ್ನು ಕೇಂದ್ರೀಕರಿಸಲು ಮತ್ತು ಗಮನ ಸೆಳೆಯಲು ವಿರೋಧ ಪಕ್ಷಗಳು ಸಜ್ಜಾಗಿವೆ ಎಂದು ವರದಿಯಾಗಿದೆ. ಈಗಾಗಲೇ, ಮನರೇಗಾವನ್ನು ಬದಲಿಸಿರುವುದರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿರುವ ಕಾಂಗ್ರೆಸ್ ಸಂಸದರು, ‘ಕಾಂಗ್ರೆಸ್ ಸಂಸದೀಯ ಸಮಿತಿ’ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸಭೆ ನಡೆಸಿದೆ. ಅಧಿವೇಶನದಲ್ಲೂ ಕೇಂದ್ರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ.




