2011-13ರ ನಡುವೆ ಯುಪಿಎ ಸರ್ಕಾರದ ವಿರುದ್ಧ ಆಂದೋಲನ ನಡೆಸಿ ಇಡೀ ದೇಶದ ಗಮನ ಸೆಳೆದಿದ್ದ ಅಣ್ಣಾ ಹಜಾರೆ, ಇದೀಗ ಮತ್ತೆ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಮಹಾರಾಷ್ಟ್ರ ಸರ್ಕಾರದ ‘ಲೋಕಪಾಲ್ ಕಾಯ್ದೆ’ಯ ಜಾರಿಯಲ್ಲಿನ ವಿಳಂಬದ ವಿರುದ್ಧ ಅಣ್ಣಾ ಹಜಾರೆ ಹೋರಾಟಕ್ಕೆ ಮುಂದಾಗಿದ್ದು, 2026ರ ಜನವರಿ 30ರಿಂದ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಿಸಿದ್ದಾರೆ.
ಜನವರಿ 30 ಮಹಾತ್ಮ ಗಾಂಧಿ ಅವರ ಪುಣ್ಯತಿಥಿಯ ದಿನವಾಗಿದ್ದು, ಅಂದಿನಿಂದ ಮಹಾರಾಷ್ಟ್ರದಲ್ಲಿರುವ ತಮ್ಮ ಸ್ವಗ್ರಾಮ ರಾಲೇಗನ್ ಸಿದ್ದಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಪತ್ರ ಬರೆದಿರುವ ಹಜಾರೆ, “ಮಹಾರಾಷ್ಟ್ರದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಪಾಲ್ ಕಾಯ್ದೆಯನ್ನು ರೂಪಿಸಲಾಗಿದೆ. ಆದರೆ, ಸರ್ಕಾರ ಆ ಕಾಯ್ದೆಯ ಜಾರಿಯಲ್ಲಿ ವಿಳಂಬ ಮಾಡುತ್ತಿದೆ. ಕಾಯ್ದೆಯನ್ನು ಕೂಡಲೇ ಜಾರಿಗೆ ತರಬೇಕು” ಎಂದು ಒತ್ತಾಯಿಸಿದ್ದಾರೆ.




