ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಸೋಮವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 19 ಮಂದಿ ಸಾವನ್ನಪ್ಪಿದ್ದು, ಹಲವಾರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮದ್ಯದ ನಶೆಯಲ್ಲಿ ನಿಯಂತ್ರಣ ತಪ್ಪಿದ ಡಂಪರ್ ಟ್ರಕ್ ಚಾಲಕನು ಸುಮಾರು ಐದು ಕಿಲೋಮೀಟರ್ ದೂರವರೆಗೆ ವಾಹನಗಳನ್ನು ಓಡೊಸುತ್ತಾ ಸಾಗಿದ್ದು, ಈ ಭೀಕರ ಅಪಘಾತಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೋಹಮಂಡಿ ರಸ್ತೆಯ ಮೇಲೆ ವೇಗವಾಗಿ ಬರುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಕಾರುಗಳು ಮತ್ತು ಬೈಕ್ಗಳ ಮೇಲೆ ಡಿಕ್ಕಿ ಹೊಡೆದಿದೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಚಾಲಕನು ಅತಿಯಾದ ಮದ್ಯಪಾನದಲ್ಲಿದ್ದು, ಅನೇಕ ವಾಹನಗಳಿಗೆ ಡಿಕ್ಕಿ ಹೊಡೆದರೂ ನಿಲ್ಲದೇ ಮುಂದುವರಿದಿದ್ದಾನೆ. ಕೊನೆಗೆ ಟ್ರಕ್ ಭಾರೀ ಡಿಕ್ಕಿಯೊಂದರಿಂದ ನಿಂತಿದ್ದು, ಆ ಸಂದರ್ಭದಲ್ಲಿ ಹಲವು ವಾಹನಗಳು ಚೂರುಚೂರಾಗಿವೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿಗಳ ಛಲಕ್ಕೊಂದು ಸಲಾಂ; ಮಾತು ತಪ್ಪದಿರಲಿ ಸರ್ಕಾರ
ಘಟನಾ ಸ್ಥಳಕ್ಕೆ ತಕ್ಷಣವೇ ರಕ್ಷಣಾ ತಂಡಗಳು ಮತ್ತು ಸ್ಥಳೀಯ ಪೊಲೀಸರು ಧಾವಿಸಿ, ಅವಶೇಷಗಳಲ್ಲಿ ಸಿಲುಕಿದವರನ್ನು ಹೊರತೆಗೆದಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು, ಮೃತಪಟ್ಟವರ ಗುರುತು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಟ್ರಕ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಮದ್ಯಪಾನದ ಪರೀಕ್ಷೆ ನಡೆಸುತ್ತಿದ್ದಾರೆ.
ಈ ಘಟನೆಗೆ ಒಂದು ದಿನ ಮೊದಲು ಫಲೋಡಿ ತಾಲೂಕಿನಲ್ಲೂ ಇನ್ನೊಂದು ಭೀಕರ ಅಪಘಾತ ಸಂಭವಿಸಿ, ದೇವರ ದರ್ಶನ ಮುಗಿಸಿಕೊಂಡು ಹಿಂದಿರುಗುತ್ತಿದ್ದ ಭಕ್ತರಲ್ಲಿ 15 ಮಂದಿ ಸಾವನ್ನಪ್ಪಿದ್ದರು.
ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಅವರು ಈ ಅಪಘಾತದ ಬಗ್ಗೆ ಆಘಾತ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ ಎಲ್ಲ ರೀತಿಯ ಸಹಾಯ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಯನ್ನು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.





