ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿರುವ ದೇವಾಲಯವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಇಬ್ಬರು ಭಕ್ತರು ಸಾವನ್ನಪ್ಪಿ 40 ಮಂದಿ ಗಾಯಗೊಂಡಿದ್ದಾರೆ.
ಶ್ರಾವಣ ಮಾಸದ ಹಿನ್ನೆಲೆ ಇಂದು ಬಾರಾಬಂಕಿಯಲ್ಲಿರುವ ಪ್ರಾಚೀನ ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಭಕ್ತರು ದೇವರ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಕೆಲ ಕೋತಿಗಳು ಓವರ್ಹೆಡ್ ವಿದ್ಯುತ್ ತಂತಿಗಳ ಮೇಲೆ ಹಾರಿವೆ. ಇದರಿಂದ ವಿದ್ಯುತ್ ತಂತಿ ತುಂಡಾಗಿ ತಗಡಿನ ಶೆಡ್ ಮೇಲೆ ಬಿದ್ದಿದ್ದು ದುರಂತಕ್ಕೆ ಕಾರಣವಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?
ಕೆಲವರಿಗೆ ನೇರವಾಗಿ ವಿದ್ಯುತ್ ಸ್ಪರ್ಶ ತಗುಲಿದೆ. ಇದರಿಂದ ಇತರ ಭಕ್ತರಲ್ಲೂ ಆತಂಕ ಹೆಚ್ಚಾಗಿ ನೂಕು ನುಗ್ಗಲು ಶುರುವಾಗಿ, ಕಾಲ್ತುಳಿತ ಉಂಟಾಗಿದೆ. ಕಾಲ್ತುಳಿತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 40 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಸಮೀಪದ ತ್ರಿವೇದಿಗಂಜ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಶಾಂಕ್ ತ್ರಿಪಾಠಿ ತಿಳಿಸಿದ್ದಾರೆ.
ಘಟನೆ ತಿಳಿದ ಸಿಎಂ ಯೋಗಿ ಆದಿತ್ಯನಾಥ್ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಗಾಯಾಳುಗಳಿಗೆ ತ್ವರಿತ ಪರಿಹಾರ ಮತ್ತು ಸರಿಯಾದ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.





