ಪಟಾಕಿ ತಯಾರಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 20 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.
ಸಾಮರ್ಲಕೋಟ ಮಂಡಲದ ವೆಟ್ಲಪಾಲೆಂ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮೃತದೇಹಗಳು ಛಿದ್ರಗೊಂಡು ಪಕ್ಕದ ಭತ್ತದ ಗದ್ದೆಗೆ ಬಿದ್ದಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಕುರಿತು ಅಲ್ಲಿನ ಗೃಹ ಸಚಿವೆ ಅನಿತಾ ಮಾತನಾಡಿ, ಕಾಕಿನಾಡ ಜಿಲ್ಲೆಯ ವೆಟ್ಲಪಾಲೆಂನಲ್ಲಿರುವ ಬಾಣಸಂಚ ಪಟಾಕಿ ಉತ್ಪಾದನಾ ಕೇಂದ್ರದಲ್ಲಿ ಸಂಭವಿಸಿದ ಸ್ಫೋಟ ತೀವ್ರ ಆಘಾತವನ್ನುಂಟುಮಾಡಿದೆ. ಘಟನೆಯಲ್ಲಿ ಹಲವರು ಮೃತಪಟ್ಟಿರುವುದು ಬೇಸರದ ಸಂಗತಿ. ಘಟನೆ ಬಗ್ಗೆ ನಾನು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಘಟನೆಯಲ್ಲಿ ಮೃತಪಟ್ಟವರಿಗೆ ಹಾಗೂ ಗಾಯಗೊಂಡಿರುವವರಿಗೆ ಬೇಕಾದ ನೆರವನ್ನು ತಕ್ಷಣವೇ ಒದಗಿಸಲು ಸೂಚಿಸಿದ್ದೇನೆ ಎಂದರು.
ಇದನ್ನು ಓದಿದ್ದೀರಾ? ಎಪ್ಸ್ಟೀನ್ ಪ್ರಕರಣ: ಟ್ರಂಪ್ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಕಡತಗಳೇ ನಾಪತ್ತೆ
ಇನ್ನು ದುರಂತದಲ್ಲಿ ಮೃತಪಟ್ಟವರಿಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಕಿನಾಡ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಘಟನೆ ನನಗೆ ತೀವ್ರ ನೋವುಂಟುಮಾಡಿದೆ. ಘಟನೆಯಲ್ಲಿ ಹಲವಾರು ಮಂದಿ ಮೃತಪಟ್ಟಿದ್ದಾರೆ ಎಂದು ಬೇಸರಿಸಿದ್ದಾರೆ. ಅಲ್ಲದೇ ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಸಂತ್ರಸ್ತರಿಗೆ ಬೇಕಾದ ನೆರವನ್ನು ಒದಗಿಸುವಂತೆ ಸೂಚಿಸಿದ್ದಾರೆ.





