ಕಾರು ಮತ್ತು ವ್ಯಾನ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ನಾಲ್ವರು ಮೃತರ ಪೈಕಿ ಇಬ್ಬರು ಸಜೀವ ದಹನವಾಗಿದ್ದಾರೆ.
ಇಂದೋರ್ ಜಿಲ್ಲಾ ಕೇಂದ್ರ ಕಚೇರಿಯಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಮೊವ್ ತಹಸಿಲ್ನ ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅವ್ಲೇ ಗ್ರಾಮದ ಬಳಿ ಬುಧವಾರ ತಡರಾತ್ರಿ ಈ ಅಪಘಾತ ನಡೆದಿದೆ. ವ್ಯಾನ್ ಅಗ್ನಿಗಾಹುತಿಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಛತ್ತೀಸ್ಗಢ | ಭೀಕರ ಅಪಘಾತ: ಹೊತ್ತಿ ಉರಿದ ಕಾರು, ನಾಲ್ವರ ಸಾವು
ವ್ಯಾನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಹಿಂಭಾಗದಲ್ಲಿ ಸಂಗ್ರಹಿಸಲಾಗಿದ್ದ ಬಣ್ಣದ ಡಬ್ಬಿಗಳಿಂದಾಗಿ ಬೆಂಕಿ ಇನ್ನಷ್ಟೂ ಹಬ್ಬಿದೆ ಎಂದು ಬದ್ಗೊಂಡ ಪೊಲೀಸ್ ಠಾಣೆಯ ಅಧಿಕಾರಿ ಪ್ರಕಾಶ್ ವಾಸ್ಕಾಲೆ ಪಿಟಿಐಗೆ ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ತಂಡವು ಸ್ಥಳಕ್ಕೆ ಆಗಮಿಸಿ ಬೆಂಕಿ ನಿಯಂತ್ರಿಸಿದೆ. ಆದರೆ ವ್ಯಾನ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ. ಇನ್ನಿಬ್ಬರು ಮೃತರು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಎಂದು ಅಧಿಕಾರಿ ಹೇಳಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.





