ಮುಸ್ಲಿಂ ವಿರೋಧಿ ಭಾಷಣ ಮಾಡಿದ್ದಕ್ಕಾಗಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಆಕ್ಟೋಬರ್ 05 ರಂದು ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ಯೋಗ ಗುರು ಬಾಬಾ ರಾಮ್ದೇವ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಸೋಮವಾರ ಸೂಚಿಸಿದೆ.
ನ್ಯಾಯಮೂರ್ತಿ ಕುಲದೀಪ್ ಮಾಥುರ್ ಅವರಿದ್ಧ ಪೀಠವು ಈ ವರ್ಷದ ಏಪ್ರಿಲ್ 13 ರಂದು ನೀಡಲಾದ ಮಧ್ಯಂತರ ಆದೇಶದ ತಡೆಯಾಜ್ಞೆಯನ್ನು ಆಕ್ಟೋಬರ್ 16 ರವರಗೆ ವಿಸ್ತರಿಸಿದೆ.
ಈ ವರ್ಷದ ಆರಂಭದಲ್ಲಿ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಧರ್ಮದರ್ಶಿಗಳ ಸಭೆಯೊಂದರಲ್ಲಿ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ರಾಮ್ದೇವ್ ಅವರ ವಿರುದ್ಧ ದಾಖಲಿಸಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ರಾಮ್ದೇವ್ ಪರ ವಕೀಲರು ಸಲ್ಲಿಸಿದ ಮನವಿಯನ್ನು ನ್ಯಾಯಲಯ ವಿಚಾರಣೆ ನಡೆಸುತ್ತಿದೆ.
ಈ ಸುದ್ದಿ ಓದಿದ್ದೀರಾ? ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಧರ್ಮದರ್ಶಿಗಳ ಸಭೆಯೊಂದರಲ್ಲಿ ಮಾತನಾಡಿದ್ದ ರಾಮ್ದೇವ್, ಮುಸ್ಲಿಮರು ಭಯೋತ್ಪಾದಕ ಕೃತ್ಯಗಳನ್ನೆಸಗುತ್ತಿದ್ದು, ಹಿಂದೂ ಮಹಿಳೆಯರನ್ನು ಅಪಹರಿಸುತ್ತಿದ್ದಾರೆ ಎಂದು ಭಾಷಣ ಮಾಡಿದ್ದರು. ಅಲ್ಲದೆ ಹಿಂದೂ ಧರ್ಮವು ಒಳ್ಳೆಯದನ್ನು ಬೋಧಿಸಿದರೆ, ಇಸ್ಲಾಂ ಹಾಗೂ ಕ್ರಿಶ್ಚಿಯನ್ ಧರ್ಮಗಳು ಮತಾಂತರ ನಡೆಸುತ್ತಿವೆ ಎಂದು ಹೇಳಿದ್ದರು.
ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಧಿಸಿದಂತೆ ಬಾಬಾ ರಾಮ್ದೇವ್ ವಿರುದ್ಧ ಐಪಿಸಿ ಸೆಕ್ಷನ್ 153 (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳನ್ನು ಎಸಗುವ ಮೂಲಕ ಯಾವುದೇ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು) ಮತ್ತು 298 (ಉಚ್ಚರಿಸುವುದು, ಪದಗಳು, ಇತ್ಯಾದಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.





