ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇನ್ನು ಮೂರ್ನಾಲ್ಕು ದಿನಗಳಲ್ಲಿ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ ಎಂದು ದೆಹಲಿ ಸಚಿವೆ ಅತಿಶಿ ಆತಂಕ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿಬಿಐ ಕೇಜ್ರಿವಾಲ್ ಅವರಿಗೆ ಶನಿವಾರ ಅಥವಾ ಭಾನುವಾರ ನೋಟಿಸ್ ಜಾರಿಗೊಳಿಸುವ ಸಾಧ್ಯತೆಯಿದೆ.ಎಎಪಿ ಹಾಗೂ ಕಾಂಗ್ರೆಸ್ ನಡುವಣ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ. ಬುಧವಾರ ಸಂಜೆ ಕಾಂಗ್ರೆಸ್ನೊಂದಿಗೆ ಸೀಟು ಹಂಚಿಕೆ ಮಾಡಿಕೊಂಡರೆ ಕೇಜ್ರಿವಾಲ್ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂದು ಎಎಪಿ ನಾಯಕರು ಸಂದೇಶ ಸ್ವೀಕರಿಸಿದ್ದಾರೆ.
ಕೇಜ್ರಿವಾಲ್ ಅವರು ಬಂಧನದಿಂದ ತಪ್ಪಿಸಿಕೊಳ್ಳಬೇಕಾದರೆ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ದೊಂದಿಗೆ ಸಂಬಂಧ ಕಡಿದುಕೊಳ್ಳಬೇಕು ಎಂದು ಎಎಪಿ ನಾಯಕರು ಸಂದೇಶ ಸ್ವೀಕರಿಸಿದ್ದಾರೆ. ಕ್ಷೇತ್ರ ಹಂಚಿಕೆಗಾಗಿ ಎಎಪಿ ಮತ್ತು ಕಾಂಗ್ರೆಸ್ ಅಂತಿಮ ಹಂತದ ಮಾತುಕತೆಯಲ್ಲಿದೆ. ಕೆಲ ದಿನಗಳಲ್ಲಿ ಇಬ್ಬರು ನಾಯಕರು ಅಧಿಕೃತ ಹೇಳಿಕೆ ನೀಡಲಿದ್ದಾರೆ ಎಂದು ಅತಿಶಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?
ಮೂಲಗಳ ಪ್ರಕಾರ ಎಎಪಿಯು ಕಾಂಗ್ರೆಸ್ ಜೊತೆ ದೆಹಲಿ, ಗುಜರಾತ್, ಅಸ್ಸಾಂ ಹಾಗೂ ಹರಿಯಾಣ ರಾಜ್ಯಗಳಲ್ಲಿ ಸೀಟು ಹಂಚಿಕೆ ಒಪ್ಪಂದ ಮಾಡಿಕೊಳ್ಳಲಿದೆ.
ಉಭಯ ಪಕ್ಷಗಳ ಒಪ್ಪಂದದ ಪ್ರಕಾರ ದೆಹಲಿಯಲ್ಲಿ ಕಾಂಗ್ರೆಸ್ 3, ಎಎಪಿ 4 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಗುಜರಾತ್ನಲ್ಲಿ ಕಾಂಗ್ರೆಸ್, ಎಎಪಿಗೆ 2 ಕ್ಷೇತ್ರಗಳನ್ನು ಬಿಟ್ಟುಕೊಡಲಿದೆ.ಹರಿಯಾಣ ಹಾಗೂ ಅಸ್ಸಾಂನಲ್ಲೂ ಕೂಡ ಎಎಪಿ ಒಂದು ಸ್ಥಾನ ಪಡೆಯಲಿದೆ.
ಎಸ್ಪಿ ಹಾಗೂ ಕಾಂಗ್ರೆಸ್ ನಡುವೆಯೂ ಸೀಟು ಹಂಚಿಕೆ ಪೂರ್ಣಗೊಂಡಿದ್ದು, ಉತ್ತರ ಪ್ರದೇಶದಲ್ಲಿ ಎಸ್ಪಿ 63 ಹಾಗೂ ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಹಾಗೆಯೆ ಮಧ್ಯಪ್ರದೇಶದಲ್ಲಿ ಕೈ ಪಕ್ಷ 28 ಹಾಗೂ ಎಸ್ಪಿ 1 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.





