ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಶನಿವಾರ ನಡೆದ ಕಾಲ್ತುಳಿತದಲ್ಲಿ ಕನಿಷ್ಠ 9 ಮಂದಿ ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯದ ಆವರಣದಲ್ಲಿ ಭಕ್ತರ ಮೃತದೇಹಗಳು ಬಿದ್ದಿರುವ ಆಘಾತಕಾರಿ ದೃಶ್ಯಗಳು ಮಾಧ್ಯಮಗಳಲ್ಲಿ ವರದಿಯಾಗಿದೆ.
ಆಂಧ್ರಪ್ರದೇಶ ಮುಖ್ಯಮಂತ್ರಿಗಳ ಕಚೇರಿ (CMO) ಹೇಳಿಕೆ ಪ್ರಕಾರ, ಏಕಾದಶಿ ಆಚರಣೆಗಾಗಿ ದೇವಾಲಯಕ್ಕೆ ಬೃಹತ್ ಜನಸಮೂಹ ಸೇರಿದ್ದರಿಂದ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗಿ ಈ ದುರಂತ ಸಂಭವಿಸಿದೆ. ಗಾಯಗೊಂಡ ಭಕ್ತರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಪೊಲೀಸ್ ತಂಡಗಳು ಮತ್ತು ತುರ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ರಾಜ್ಯ ಕೃಷಿ ಸಚಿವ ಕೆ. ಅಚ್ಚನ್ನಾಯ್ಡು ಘಟನೆಯ ನಂತರ ದೇವಾಲಯಕ್ಕೆ ತಲುಪಿ ದೇವಾಲಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಜನಸಮೂಹ ನಿಯಂತ್ರಣ ಮತ್ತು ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರದಲ್ಲಿ ಕೋಟಿ ಉದ್ಯೋಗದ ಭರವಸೆ; ಹಳೆಯ ಭರವಸೆ ಎಲ್ಲಿ ಹೋಯಿತು ಮೋದೀಜೀ?
ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕಾಲ್ತಳಿತಕ್ಕೆ ಆಘಾತ ವ್ಯಕ್ತಪಡಿಸಿ, ಜೀವಗಳ ನಷ್ಟವನ್ನು “ಅತ್ಯಂತ ಹೃದಯವಿದ್ರಾವಕ” ಎಂದು ಕರೆದಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ, ಗಾಯಗೊಂಡವರಿಗೆ ತ್ವರಿತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
“ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದ ವೆಂಕಟೇಶ್ವರ ದೇವಾಲಯದಲ್ಲಿ ನಡೆದ ಕಾಲ್ತಳಿತ ಘಟನೆ ಆಘಾತಕಾರಿ. ಈ ದುರಂತದಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಗೊಂಡವರಿಗೆ ತ್ವರಿತ ಮತ್ತು ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸ್ಥಳೀಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡಬೇಕು” ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.





