ತಮಿಳು ನಟ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಕನ್’ಚಲನಚಿತ್ರದ ಬಿಡುಗಡೆಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಡೆಯೊಡ್ಡುತ್ತಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದು, ಇದು “ತಮಿಳು ಸಂಸ್ಕೃತಿಯ ಮೇಲಿನ ದಾಳಿ” ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ಜನ ನಾಯಕನ್ ಚಿತ್ರವನ್ನು ತಡೆಯಲು ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮಾಡುತ್ತಿರುವ ಪ್ರಯತ್ನವು ತಮಿಳು ಸಂಸ್ಕೃತಿಯ ಮೇಲಿನ ನೇರ ದಾಳಿಯಾಗಿದೆ. ಮೋದಿಯವರೇ, ತಮಿಳು ಜನರ ಧ್ವನಿಯನ್ನು ಹತ್ತಿಕ್ಕುವ ನಿಮ್ಮ ಪ್ರಯತ್ನ ಎಂದಿಗೂ ಯಶಸ್ವಿಯಾಗುವುದಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಟ ಹಾಗೂ ರಾಜಕಾರಣಿ ವಿಜಯ್ ನಟನೆಯ ‘ಜನ ನಾಯಕನ್’ ಚಿತ್ರವು ಜನವರಿ 9 ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಕೇಂದ್ರ ಸೆನ್ಸಾರ್ ಮಂಡಳಿ (CBFC) ಪ್ರಮಾಣಪತ್ರ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಡುಗಡೆ ಸಾಧ್ಯವಾಗಿಲ್ಲ. ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ದೃಶ್ಯವಿದೆ ಎಂಬ ದೂರಿನ ಮೇರೆಗೆ ಪ್ರಮಾಣಪತ್ರ ತಡೆಹಿಡಿಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಯ್ದೆ-ಕಾನೂನುಗಳು ಬಡವರ ವಿರುದ್ಧವೇ ಅಥವಾ ಪ್ರಭಾವಿಗಳ ಪರವೇ?
ಚಿತ್ರದ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ , ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಏಕಸದಸ್ಯ ಪೀಠವು ಚಿತ್ರಕ್ಕೆ ‘U/A 16+’ ಪ್ರಮಾಣಪತ್ರ ನೀಡುವಂತೆ ಸಿಬಿಎಫ್ಸಿಗೆ ನಿರ್ದೇಶನ ನೀಡಿತ್ತಾದರೂ, ವಿಭಾಗೀಯ ಪೀಠವು ಈ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಸಿಬಿಎಫ್ಸಿಗೆ ಪ್ರತಿಕ್ರಿಯಿಸಲು ಕಾಲಾವಕಾಶ ನೀಡದೆ ಏಕಸದಸ್ಯ ಪೀಠ ಆದೇಶಿಸಿದೆ ಎಂದು ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದ್ದು, ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿದೆ.
ಈ ಹಿನ್ನೆಲೆಯಲ್ಲಿ, ನಿರ್ಮಾಣ ಸಂಸ್ಥೆಯು ತುರ್ತು ಪರಿಹಾರ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಪೊಂಗಲ್ ಹಬ್ಬದ ಸಮಯದಲ್ಲಿ ಚಿತ್ರ ಬಿಡುಗಡೆ ಮಾಡಲು ಅನುಮತಿ ಕೋರಿದೆ.
ಕಾಂಗ್ರೆಸ್ ನಾಯಕರ ಟೀಕೆ
ರಾಹುಲ್ ಗಾಂಧಿ ಅವರಲ್ಲದೆ, ಕಾಂಗ್ರೆಸ್ ನಾಯಕರಾದ ಮಾಣಿಕ್ಕಂ ಟ್ಯಾಗೋರ್, ಜ್ಯೋತಿಮಣಿ, ಪ್ರವೀಣ್ ಚಕ್ರವರ್ತಿ ಮತ್ತು ತಮಿಳುನಾಡು ಉಸ್ತುವಾರಿ ಗಿರೀಶ್ ಚೋಡಂಕರ್ ಅವರು ಸಿಬಿಎಫ್ಸಿಯ ನಡೆಯನ್ನು ಟೀಕಿಸಿದ್ದಾರೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮತ್ತು ಸಾಂವಿಧಾನಿಕ ಸಂಸ್ಥೆಗಳ ರಾಜಕೀಯಕರಣದ ಉದಾಹರಣೆ ಎಂದು ಅವರು ಆರೋಪಿಸಿದ್ದಾರೆ.





