ಪಶ್ಚಿಮ ಬಂಗಾಳ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿವೆ. ಬಿಜೆಪಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾದಲ್ಲಿ ಶನಿವಾರ (ಇಂದು) ಸಂಜೆ ರ್ಯಾಲಿ ನಡೆಸಲಿದ್ದಾರೆ. ಬ್ರಿಗೇಡ್ ಪರೇಡ್ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅದಕ್ಕೂ ಮುನ್ನವೇ, ಕೋಲ್ಕತ್ತಾದ ಗಿರೀಶ್ ಪಾರ್ಕ್ ಬಳಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.
ತಾವು ಮೋದಿ ಪರವಾಗಿ ಘೋಷಣೆಗಳನ್ನು ಕೂಗುತ್ತಾ ಸಮಾವೇಶದ ಸ್ಥಳದತ್ತ ಹೋಗುತ್ತಿದ್ದಾಗ, ತಮ್ಮ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಬಿಜೆಪಿ ಬೆಂಬಲಿಗರು ಆರೋಪಿಸಿದ್ದಾರೆ.
ಸ್ಥಳೀಯ ಟಿಎಂಸಿ ಕಾರ್ಯಕರ್ತರು ಈ ಆರೋಪಗಳನ್ನು ನಿರಾಕರಿಸಿದ್ದು, ಬಿಜೆಪಿ ಬೆಂಬಲಿಗರೇ ಮೊದಲು ನಿಂದಿಸಲು ಮತ್ತು ಕಲ್ಲು ತೂರಾಟ ನಡೆಸಲು ಆರಂಭಿಸಿದರು ಎಂದು ಪ್ರತಿಪಾದಿಸಿದ್ದಾರೆ. ಸ್ಥಳೀಯ ಟಿಎಂಸಿ ನಾಯಕರ ನಿವಾಸದ ಮೇಲೆಯೂ ಕಲ್ಲು ತೂರಾಟ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಎರಡೂ ಪಕ್ಷಗಳ ಬೆಂಬಲಿಗರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಘರ್ಷಣೆಯ ವೇಳೆ ಹಲವು ವಾಹನಗಳು ಹಾನಿಗೀಡಾಗಿವೆ ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಪ್ರಧಾನಿ ಮೋದಿ ಅವರು ಬಂಗಾಳದಲ್ಲಿ 18,000 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿದುಬಂದಿದೆ.




