ಅತಿವೃಷ್ಟಿಯಿಂದ ಹಾನಿಗೀಡಾದ ಬೆಳೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಹಾರ ಮಾನದಂಡಗಳನ್ನು ತಕ್ಷಣವೇ ಪರಿಷ್ಕರಿಸುವಂತೆ ಮತ್ತು ಬೆಳೆ ಕಳೆದುಕೊಂಡ ರೈತರಿಗೆ ಹೆಚ್ಚುವರಿ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ಸಂಸದ ಸಾಗರ್ ಖಂಡ್ರೆ ಆಗ್ರಹಿಸಿದರು.
ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ಶುಕ್ರವಾರ ಕನ್ನಡದಲ್ಲಿ ಮಾತನಾಡಿದ ಅವರು, ʼಬೀದರ್ ಕ್ಷೇತ್ರದಲ್ಲಿ ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ತೀವ್ರ ಹಾನಿಯ ಬಗ್ಗೆ ವಿವರಿಸಿ ಗಮನ ಸೆಳೆದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅಡಿಯಲ್ಲಿ ಒದಗಿಸಲಾಗುವ ಪ್ರಸ್ತುತ ಪರಿಹಾರ ಅಸಮರ್ಪಕವಾಗಿದೆ. ನೀರಾವರಿ ಭೂಮಿಗೆ ಪ್ರತಿ ಎಕರೆಗೆ 7,000 ಮತ್ತು ನೀರಾವರಿ ಅಲ್ಲದ ಭೂಮಿಗೆ ಪ್ರತಿ ಎಕರೆಗೆ 3,500 ಮೊತ್ತವು ರೈತರ ನಷ್ಟಕ್ಕೆ ಎಂದಿಗೂ ಸಾಲದುʼ ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಅತಿವೃಷ್ಟಿಯಿಂದ ಹಾನಿಗೀಡಾದ ಮುಂಗಾರು ಹಂಗಾಮಿನ ಬೆಳೆಗೆ ಈಗಾಗಲೇ ಸಂತ್ರಸ್ತ ರೈತರಿಗೆ ಹೆಚ್ಚುವರಿ ಆರ್ಥಿಕ ನೆರವು ನೀಡಲು ವಿಶೇಷ ಪ್ಯಾಕೇಜ್ ಘೋಷಿಸಿದೆ. ರೈತರ ಹಿತವನ್ನು ಪರಿಗಣಿಸಿ, ಕೇಂದ್ರ ಸರ್ಕಾರವು ಪರಿಹಾರ ಸಂಬಂಧಿತ ನಿಯಮಾವಳಿಗಳನ್ನು ಮರು ಪರಿಶೀಲಿಸಿ, ಹೆಚ್ಚುವರಿ ನೆರವು ನೀಡಬೇಕುʼ ಎಂದು ಮನವಿ ಮಾಡಿದರು.
ಇದನ್ನೂ ಓದಿ : ಬೀದರ್ | ಅಕ್ರಮ ಮದ್ಯ ಮಾರಾಟ ತಡೆಗೆ ಕೆಆರ್ಎಸ್ ಒತ್ತಾಯ
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ ಸಂಸದರು, ಪಿಎಂ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ವಿಮಾ ಕಂಪನಿಗಳು ಸಕಾಲಕ್ಕೆ ಪರಿಹಾರ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ರೈತರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ರೈತರಿಗೆ ನ್ಯಾಯಸಮ್ಮತ ಮತ್ತು ಸಮಯಕ್ಕೆ ಸರಿಯಾದ ಬೆಳೆ ವಿಮೆ ದೊರಕುವಂತೆ ಕೇಂದ್ರ ಸರ್ಕಾರ ಕ್ರಮ ವಹಿಸಬೇಕೆಂದು ಸಂಸದ ಸಾಗರ್ ಖಂಡ್ರೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.





