ಎಸ್ಸಿ,ಎಸ್ಟಿ ಹಾಗೂ ಒಬಿಸಿ ಸಮುದಾಯದವರಿಗೆ ಮೀಸಲಾತಿ ರದ್ದುಪಡಿಸುವುದಾಗಿ ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆನ್ನಲಾದ ನಕಲಿ ವಿಡಿಯೋ ಪ್ರಸಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ದೂರು ದಾಖಲಿಸಿದ್ದಾರೆ.
ಅಮಿತ್ ಶಾ ಬಗ್ಗೆ ತಿರುಚಿದ ವಿಡಿಯೋ ಪ್ರಸಾರ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಗೃಹ ಇಲಾಖೆ ದೂರು ದಾಖಲಿಸಿತ್ತು.
ವಿಡಿಯೋದ ದೃಢೀಕರಣದ ಬಗ್ಗೆ ಬಿಜೆಪಿ ಎತ್ತಿರುವ ಕಳವಳಗಳ ಪ್ರತಿಕ್ರಿಯೆಯಾಗಿ ದೆಹಲಿ ಪೊಲೀಸರು ಭಾನುವಾರ(ಏ.29) ಎಫ್ಐಆರ್ ದಾಖಲಿಸಿದ್ದಾರೆ. ರಾಜಕೀಯ ರ್ಯಾಲಿಯ ಸಂದರ್ಭದಲ್ಲಿ ಅಮಿತ್ ಶಾ ಅವರ ನಿಜವಾದ ಹೇಳಿಕೆಯನ್ನು ತಿರುಚಿರುವ ಬಗ್ಗೆ ಬಿಜೆಪಿ ಖಂಡನೆ ವ್ಯಕ್ತಪಡಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ
ಉದ್ದೇಶಪೂರ್ವಕವಾಗಿ ಹಿಂಸೆಯನ್ನು ಪ್ರಚೋದಿಸಲು ಕಾಂಗ್ರೆಸ್ ತಿರುಚಿದ ವಿಡಿಯೋವನ್ನು ಎಲ್ಲಡೆ ಪ್ರಚಾರ ಮಾಡುತ್ತಿದೆ. ಅಮಿತ್ ಶಾ ಅವರು ತೆಲಂಗಾಣದಲ್ಲಿ ಎಸ್ಸಿ,ಎಸ್ಟಿ ಹಾಗೂ ಒಬಿಸಿ ಸಮುದಾಯಗಳ ಪಾಲನ್ನು ಕಡಿತಗೊಳಿಸಿ ಮುಸ್ಲಿಂ ಸಮುದಾಯಕ್ಕೆ ಅಸಂವಿಧಾನಿಕವಾಗಿ ನೀಡಲಾಗಿದೆ ಎಂದು ಹೇಳಿದ್ದರು. ಈ ವಿಡಿಯೋವನ್ನು ಕಾಂಗ್ರೆಸ್ ತಿರುಚಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ವಕ್ತಾರ ಅಮಿತ್ ಮಾಳವೀಯ ತಿಳಿಸಿದ್ದಾರೆ.
ಎಫ್ಐಆರ್ ದಾಖಲಿಸಿರುವ ದೆಹಲಿ ಪೊಲೀಸ್ ವಿಶೇಷ ಸೆಲ್ನ ಘಟಕವಾದ ಐಎಫ್ಎಸ್ಒ ಮಾರ್ಪಡಿಸಿದ ವಿಡಿಯೋ ಬಗ್ಗೆ ತನಿಖೆ ಆರಂಭಿಸಿದೆ.





