ಪ್ರಧಾನಿ ನರೇಂದ್ರ ಮೋದಿ ಅವರನ್ನು ಜಾತಿ ಆಧಾರಿತ ಹೇಳಿಕೆಗಳೊಂದಿಗೆ ನಿಂದಿಸಿದ್ದಾರೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಜೈಪುರದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.
2024ರಲ್ಲಿ ಛತ್ತೀಸ್ಗಢದಲ್ಲಿ ನಡೆದ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು ‘ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟಿನಿಂದ ಒಬಿಸಿ ಅಲ್ಲ, ಗುಜರಾತ್ನ ತೇಲಿ ಸಮುದಾಯಕ್ಕೆ ಸೇರಿದವರು. ತೇಲಿ ಸಮುದಾಯವನ್ನು 2000ದ ಇಸವಿಯಲ್ಲಿ ಒಬಿಸಿ ವರ್ಗಕ್ಕೆ ಸೇರಿಸಲಾಯಿತು. ಹೀಗಾಗಿ, ಪ್ರಧಾನಿ ಸಾಮಾನ್ಯ ವರ್ಗದಲ್ಲಿ ಜನಿಸಿ, ನಂತರ ಒಬಿಸಿಯಾದರು’ ಎಂದಿದ್ದರು ಎಂದು ವರದಿಯಾಗಿದೆ. ರಾಹುಲ್ ಗಾಂಧಿ ಅವರ ಈ ಹೇಳಿಕೆ ವಿರುದ್ಧ ವಕೀಲ ವಿಜಯ್ ಕಲಂದರ್ ಎಂಬವರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ರಾಹುಲ್ ಗಾಂಧಿ ಅವರ ಹೇಳಿಕೆಯು ಸಾರ್ವಜನಿಕ ಶಾಂತಿ ಮತ್ತು ರಾಷ್ಟ್ರೀಯ ಸಮಗ್ರತೆಗೆ ಹಾನಿಕಾರಕವಾಗಿವೆ. ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ವಾದಿಸಿದ್ದರು. ಆದಾಗ್ಯೂ, ಅವರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು.
ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ವಕೀಲ ವಿಜಯ್ ಕಲಂದರ್ ಅವರು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಪರಿಷ್ಕರಣಾ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಆಲಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ನೀಲಂ ಕರ್ವಾ ಅವರು “ದೂರುದಾರರ ಹೇಳಿಕೆಗಳು ಮತ್ತು ದಾಖಲೆಯಲ್ಲಿ ಇರಿಸಲಾದ ವಿಷಯಗಳು ಅರ್ಜಿಯನ್ನು ಬೆಂಬಲಿಸುವುದಿಲ್ಲ” ಎಂದು ಹೇಳಿದ್ದಾರೆ. ಅರ್ಜಿಯನ್ನು ವಜಾಗೊಳಿಸಿದ್ದಾರೆ.




