ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಮಂದಿಯನ್ನು ಖುಲಾಸೆಗೊಳಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇಂದ್ರ ತನಿಖಾ ದಳ (ಸಿಬಿಐ) ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
“ಕೇಜ್ರಿವಾಲ್, ಸಿಸೋಡಿಯಾ ಮತ್ತು ಇತರರ ವಿರುದ್ಧ ಸಾಕಷ್ಟು ಪುರಾವೆಗಳಿವೆ. ಸಾಕ್ಷಿಗಳು ಸಿಬಿಐ ಪ್ರಕರಣವನ್ನು ಬೆಂಬಲವಿದ್ದಾರೆ” ಎಂದು ಸಿಬಿಐ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸೋಮವಾರ ಹೈಕೋರ್ಟ್ಗೆ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ದೆಹಲಿ ಅಬಕಾರಿ ನೀತಿ ಪ್ರಕರಣ | ಎಎಪಿಯನ್ನು ಆರೋಪಿಯನ್ನಾಗಿ ಮಾಡುತ್ತೇವೆಂದ ಇಡಿ
ವಿಚಾರಣಾ ನ್ಯಾಯಾಲಯವು ಕೇಜ್ರಿವಾಲ್, ಸಿಸೋಡಿಯಾ ಮತ್ತು ಇತರರ ಪರವಾಗಿ ಖುಲಾಸೆಗೊಳಿಸುವ ಆದೇಶವನ್ನು ವಿಚಾರಣೆ ನಡೆಸದೆಯೇ ಅಂಗೀಕರಿಸಿದೆ ಎಂದೂ ಸಿಬಿಐ ದೂರಿದೆ.
ದೆಹಲಿ ಸರ್ಕಾರವು 2021-22 ಅಬಕಾರಿ (ಮದ್ಯ) ನೀತಿಯನ್ನು ಜಾರಿಗೊಳಿಸಿದೆ. ಇದರ ಅಡಿಯಲ್ಲಿ ಸರ್ಕಾರವು ಮದ್ಯ ಮಾರಾಟದಿಂದ ಸಂಪೂರ್ಣವಾಗಿ ಹೊರಬಂದು, ಖಾಸಗಿ ವ್ಯಕ್ತಿಗಳಿಗೆ ಪರವಾನಗಿ ನೀಡಿತು. ಆದರೆ ಈ ನೀತಿಯನ್ನು ರೂಪಿಸುವಾಗ ಕೆಲವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡಲು ಉದ್ದೇಶಪೂರ್ವಕವಾಗಿ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.
ಖಾಸಗಿ ಕಂಪನಿಗಳಿಗೆ ಲಾಭವಾಗುವಂತೆ ನೀತಿ ನಿರೂಪಿಸಿ ಸುಮಾರು ₹100 ಕೋಟಿ ಲಂಚ ಪಡೆಯಲಾಗಿದೆ ಎಂದು ದೂರಲಾಗಿತ್ತು. ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ನೀಡಿದ ದೂರಿನ ಮೇರಿಗೆ ಸಿಬಿಐ ಪ್ರಕರಣ ದಾಖಲಿಸಿತ್ತು. ಜಾರಿ ನಿರ್ದೇಶನಾಲಯವೂ (ಇಡಿ) ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿತ್ತು. ಈ ಆರೋಪಗಳ ಬೆನ್ನಲ್ಲೇ 2022ರ ಜುಲೈನಲ್ಲಿ ಈ ನೀತಿಯನ್ನು ಸರ್ಕಾರ ಹಿಂಪಡೆದಿದೆ.
ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಆದರೆ ಇತ್ತೀಚೆಗೆ ಈ ಪ್ರಕರಣದಲ್ಲಿ ಬಲವಾದ ಪುರಾವೆಗಳು ಇಲ್ಲ ಎಂದು ಅಭಿಪ್ರಾಯಿಸಿರುವ ಕೋರ್ಟ್ ಆರೋಪಿಗಳನ್ನು ಖುಲಾಸೆಗೊಳಿಸಿದೆ.





