ಮಹಾರಾಷ್ಟ್ರದ ಸತಾರಾದಲ್ಲಿ ಸಾಮಾಜಿಕ ಜಾಲತಾಣದಲ್ಲಿನ ವಿವಾದಾತ್ಮಕ ಪೋಸ್ಟ್ ಸಂಬಂಧ ಕೋಮುಗಲಭೆ ಹುಟ್ಟಿಕೊಂಡಿದ್ದು, ಅದರಲ್ಲಿ ಓರ್ವ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಲಭೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದನ್ನು ಸತಾರಾದ ಹಿರಿಯ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಇನ್ನೂ ಹಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಸತಾರಾ ಜಿಲ್ಲಾಡಳಿತವು, ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.
ಲಭ್ಯ ಮಾಹಿತಿಯ ಪ್ರಕಾರ, ಪೂನಾದಿಂದ 160 ಕಿಮೀ ದೂರವಿರುವ ಮತ್ತು ಸತಾರಾದಿಂದ 50 ಕಿಮೀ ದೂರದ ಪುಸೇಸವಲಿ ಎನ್ನುವ ಹಳ್ಳಿಯಲ್ಲಿ ಗಲಭೆ ಸ್ಫೋಟಗೊಂಡಿದೆ. ಒಂದು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಕೆಲವು ಯುವಕರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್ ಸಂಬಂಧ ಭಾನುವಾರ ರಾತ್ರಿ ಒಂಬತ್ತು ಗಂಟೆಗೆ ಗಲಭೆ ಆರಂಭವಾಗಿದೆ. ಗಲಭೆಯಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.
ಸ್ಥಳದಲ್ಲಿ ಪೊಲೀಸ್ ಬಳಗ ಮೊಕ್ಕಾಂ ಹೂಡಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸುಳ್ಳು ಸುದ್ದಿ ಹಬ್ಬಿಸದಂತೆ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.





