ಅಕಾಲಿಕ ಮಳೆಯಿಂದಾಗಿ ಬೆಳೆದು ನಿಂತಿದ್ದ ಭತ್ತದ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ರೈತರನ್ನು ಕೈಲಾಶ್ ಮೀನಾ ಎಂದು ಹೆಸರಿಸಲಾಗಿದೆ.
ಮೊಂತಾ ಚಂಡಮಾರುತರಿಂದಾಗಿ ಆಂಧ್ರಪ್ರದೇಶ, ಒಡಿಶಾ, ತೆಲಂಗಾಣ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಧ್ಯಪ್ರದೇಶದ ಶಿಯೋಪುರ್ ಮತ್ತು ಮೊರೆನಾ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಸಾಕಷ್ಟು ಹಾನಿ ಉಂಟಾಗಿದೆ.
ರೈತ ಕೈಲಾಶ್ ಮೀನಾ ಅವರು ತಮ್ಮ ಮೂರು ಎಕರೆ ಭೂಮಿಯಲ್ಲಿ ಭತ್ತ ಬೆಳೆದಿದ್ದರು. ಆದರೆ, ಧಾರಾಕಾರ ಮಳೆಯಿಂದಾಗಿ ಭೂಮಿ ಸಂಪೂರ್ಣ ಜಲಾವೃತಗೊಂಡಿದ್ದು, ಬೆಳೆ ನಾಶವಾಗಿದೆ. ಪರಿಣಾಮ ಬೀಜಗಳು, ರಸಗೊಬ್ಬರ ಹಾಗೂ ಕಾರ್ಮಿಕರ ಕೂಲಿಗಾಗಿ ವ್ಯಯಿಸಿದ್ದ ಹಣ ಮರಳಿ ಕೈಸೇರಂತಾಗಿದೆ. ನಷ್ಟದಿಂದ ಕಂಗಾಲಾಗಿದ್ದ ರೈತ, ತಮ್ಮ ಜೀವವನ್ನೇ ಅಂತ್ಯಗೊಳಿಸುವ ತಪ್ಪು ನಿರ್ಧಾರ ಮಾಡಿದ್ದಾರೆ.
ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಮಹಾಘಟಬಂಧನ್ ಭರಪೂರ ಭರವಸೆ; ಕಾರ್ಯಸಾಧುವೇ?
ರೈತನ ಸಾವಿನಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸದ್ದಾರೆ. ಸರ್ಕಾರವು ತ್ವರಿತ ಸ್ಪಂದನೆ ಮತ್ತು ಪರಿಹಾರ ಒದಗಿಸಿದರೆ ಇಂತಹ ಸಾವುಗಳು ಸಂಭವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಹಾರ ಮತ್ತು ಸಂತ್ರಸ್ತ ಕುಟುಂಬಕ್ಕೆ ತಕ್ಷಣದ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿಭಟನಾ ಸ್ಥಾಳಕ್ಕೆ ಧಾವಿಸಿದ ಶಿಯೋಪುರ್ ಜಿಲ್ಲಾಧಿಕಾರಿ ಅರ್ಪಿತ್ ವರ್ಮಾ ಅವರು ಸಂತ್ರಸ್ತ ಕುಟುಂಬಕ್ಕೆ 2 ಲಕ್ಷ ರೂ. ಆರ್ಥಿಕ ಸಹಾಯದ ಚೆಕ್ ನೀಡಿದ್ದಾರೆ. ಪರಿಹಾರ ಕ್ರಮಗಳನ್ನು ತ್ವರಿತವಾಗಿ ತೆಗೆದುಕೊಳ್ಳುವುದಾಗಿ ಲಿಖಿತ ಭರವಸೆ ನೀಡಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.




