ಅಂಗನವಾಡಿ ಕೇಂದ್ರ ಸಹಾಯಕಿ ಮತ್ತು ಅಡುಗೆ ಸಿಬ್ಬಂದಿ ಹುದ್ದೆಗೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕಾಗಿ ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದನ್ನೇ ನಿಲ್ಲಿಸಿರುವ ಘಟನೆ ಒಡಿಶಾದ ಕೇಂದ್ರಪಾದ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಮೂರು ತಿಂಗಳಿನಿಂದ ಮಕ್ಕಳ ಹಾಜರಾತಿಯೇ ಇಲ್ಲದೆ ಅಂಗನವಾಡಿ ಖಾಲಿ ಉಳಿದಿದೆ.
ನುವಗಾಂವ್ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ನವೆಂಬರ್ 20ರಂದು ದಲಿತ ಸಮುದಾಯದ ಸರ್ಮಿಸ್ತಾ ಸೇಥಿ ಅವರನ್ನು ಸಹಾಯಕಿಯಾಗಿ ನೇಮಿಸಲಾಗಿತ್ತು. ಇದರಿಂದಾಗಿ ಗ್ರಾಮಸ್ಥರು ತಮ್ಮ ಮಕ್ಕಳನ್ನು ಅಂಗನವಾಡಿಯಿಂದ ದೂರವಿಟ್ಟಿದ್ದಾರೆ. ಅಲ್ಲದೆ, ಅಂಗನವಾಡಿಯಲ್ಲಿ ಮಕ್ಕಳಿಗೆ ನೀಡಲಾಗುತ್ತಿದ್ದ ಪಡಿತರವನ್ನು ಮನೆಗೆ ಕೊಂಡೊಯ್ಯಲಾರಂಭಿಸಿದ್ದಾರೆ ಎಂದು ವರದಿಯಾಗಿದೆ.
ಸರ್ಮಿಸ್ತಾ ಅವರ ನೇಮಕವನ್ನು ಗ್ರಾಮದ ಅನೇಕರು ವಿರೋಧಿಸಿದ್ದಾರೆ. ಕಳೆದ ಆರು ತಿಂಗಳಲ್ಲಿ ಅಂಗನವಾಡಿಗೆ 42 ಮಕ್ಕಳು ದಾಖಲಾಗಿದ್ದಾರೆ. ಆದರೆ, ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುತ್ತಿಲ್ಲ. ಬದಲಾಗಿ, ಮಕ್ಕಳಿಗೆ ನೀಡಲಾಗುವ ಆಹಾರವನ್ನು ನಮ್ಮಿಂದ ಪಡೆದುಕೊಂಡು ಮನೆಗೆ ಕೊಂಡೊಯ್ಯುತ್ತಿದ್ದಾರೆ ಎಂದು ಅಂಗನವಾಡಿ ಕಾರ್ಯಕರ್ತೆ ಲಿಜರಾಣಿ ಪಾಂಡವ್ ತಿಳಿಸಿದ್ದಾರೆ.
ಪೋಷಕರನ್ನು ಮನವೊಲಿಸಲು ಪ್ರಯತ್ನಿಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಅಂತಿಮವಾಗಿ, ನಾವು ಉನ್ನತ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದೇವೆ. ತಾಲೂಕು ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ. ಕೆಲವು ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಒಪ್ಪಿಕೊಂಡಿದ್ದರೂ, ಹಲವರು ನಿರ್ಧಾರ ತೆಗೆದುಕೊಳ್ಳಲು ಸಮಯ ಕೇಳಿದ್ದಾರೆ ಎಂದು ವಿವರಿಸಿದ್ದಾರೆ.
ಜಿಲ್ಲಾಧಿಕಾರಿ ರಘುರಾಮ್ ಅಯ್ಯರ್ ಅವರು ಅಧಿಕಾರಿಗಳಿಂದ ವರದಿ ಕೇಳಿದ್ದು, ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.





