ಇಬ್ಬರು ದುರುಳರು ಸುಮಾರು 19 ವರ್ಷದ ದಲಿತ ಯುವಕನಿಗೆ ಥಳಿಸಿ ಆತನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಮೂತ್ರ ವಿಸರ್ಜಿಸಿ ವಿಕೃತಿ ಮರೆದಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ.
ಏಪ್ರಿಲ್ 8ರಂದು ಸಿಕಾರ್ನ ಫತೇಪುರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಭಯಗೊಂಡಿದ್ದ ಯುವಕನ ಕುಟುಂಬಸ್ಥರು ದೂರು ನೀಡಿದ ಬಳಿಕ ಏಪ್ರಿಲ್ 16ರಂದು ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಜಾತಿ ದೌರ್ಜನ್ಯ | ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಮಾಡಿ ಸವರ್ಣಿಯರ ವಿಕೃತಿ
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಪೊಲೀಸ್ ಉಪ ವರಿಷ್ಠಾಧಿಕಾರಿ (ಡಿಎಸ್ಪಿ) ಅರವಿಂದ್ ಕುಮಾರ್ ಅವರು, “ನಾವು ಈ ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿದ್ದೇವೆ. ಸಂತ್ರಸ್ತ ಯುವಕನ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ, ಹೇಳಿಕೆಯನ್ನೂ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.
ಏಪ್ರಿಲ್ 8ರಂದು ಗ್ರಾಮದಲ್ಲಿ ಮದುವೆ ಮೆರವಣಿಗೆಯನ್ನು ನೋಡಲು ಹೋದ ಯುವಕನನ್ನು ಇಬ್ಬರು ಆರೋಪಿಗಳು ಯಾವುದೋ ಕೆಲಸದ ನೆಪದಲ್ಲಿ ಬಸ್ ನಿಲ್ದಾಣಕ್ಕೆ ಕರೆದಿದ್ದಾರೆ. ನಂತರ ಇಬ್ಬರೂ ಯುವಕನನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು, ಆತನ ಗುಪ್ತಾಂಗ ಸೇರಿದಂತೆ ಇಡೀ ದೇಹಕ್ಕೆ ಥಳಿಸಿದ್ದಾರೆ. ಬಟ್ಟೆ ತೆಗಿಸಿ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
“ಆರೋಪಿಗಳು ಮದ್ಯಪಾನ ಮಾಡಿದ್ದರು. ಅವರು ನನಗೆ ಬಾಟಲಿಯಿಂದ ಹೊಡೆದರು, ನನ್ನ ಮೇಲೆ ಮೂತ್ರ ವಿಸರ್ಜಿಸಿದರು. ಜಾತಿ ನಿಂದನೆ ಮಾಡಿದರು. ಈ ಕೃತ್ಯದ ವಿಡಿಯೋ ಮಾಡಿದ್ದಾರೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಾರೆ” ಎಂದು ಸಂತ್ರಸ್ತ ಯುವಕ ಪೊಲೀಸರಿಗೆ ತಿಳಿಸಿದ್ದಾನೆ.
ಇದನ್ನು ಓದಿದ್ದೀರಾ? ಜಾತಿ ದೌರ್ಜನ್ಯ | ಕುದುರೆ ಮೇಲೆ ಮೆರವಣಿಗೆ: ದಲಿತ ವರನ ಮೇಲೆ 40 ಮಂದಿ ಪ್ರಬಲ ಜಾತಿಯ ದುರುಳರಿಂದ ಹಲ್ಲೆ
ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ವಿರೋಧ ಪಕ್ಷದ ನಾಯಕ ಟಿಕಾ ರಾಮ್ ಜುಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಹೇಗಿದೆ ಎಂಬುದು ಈ ಘಟನೆ ಬಹಿರಂಗಪಡಿಸಿದೆ ಎಂದು ಹೇಳಿದ್ದಾರೆ.
“ಈ ಘಟನೆಯಿಂದಾದ ಆಘಾತ ಆಘಾತ ಎಷ್ಟು ತೀವ್ರವಾಗಿತ್ತೆಂದರೆ, ಯುವಕನಿಗೆ ಎಂಟು ದಿನಗಳ ಕಾಲ ದೂರು ದಾಖಲಿಸಲು ಸಾಧ್ಯವಾಗಲಿಲ್ಲ. ಇದು ಇಂದಿನ ರಾಜಸ್ಥಾನದ ವಾಸ್ತವ. ದಲಿತ ಯುವಕನನ್ನು ಅಪಹರಿಸಲಾಗಿದೆ, ಥಳಿಸಲಾಗಿದೆ, ಲೈಂಗಿಕ ದೌರ್ಜನ್ಯ ನಡೆಸಲಾಗಿದೆ, ಮೂತ್ರ ವಿಸರ್ಜಿಸಲಾಗಿದೆ ಮತ್ತು ಬೆದರಿಕೆ ಹಾಕಲಾಗಿದೆ. ಇದು ಸಿನಿಮಾದ ದೃಶ್ಯವಲ್ಲ. ಇದು ನಾಚಿಕೆಗೇಡಿನ ವಾಸ್ತವ ಘಟನೆ” ಎಂದು ಅಶೋಕ್ ಗೆಹ್ಲೋಟ್ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.





