ದೆಹಲಿ ಹೈಕೋರ್ಟ್ ಆದೇಶದ ಅನ್ವಯ ಇಲ್ಲಿನ ತುರ್ಕಮನ್ ಗೇಟ್ ಮತ್ತು ರಾಮಲೀಲಾ ಮೈದಾನದ ಸಮೀಪವಿರುವ ಫೈಜ್-ಎ-ಇಲಾಹಿ ಮಸೀದಿ ಬಳಿ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯ ವೇಳೆ ಕಲ್ಲು ತೂರಾಟ ನಡೆದಿದ್ದು, ಕನಿಷ್ಠ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಬುಧವಾರ ಮುಂಜಾನೆ 1 ಗಂಟೆ ಸುಮಾರಿಗೆ ಈ ಕಾರ್ಯಾಚರಣೆಯನ್ನು ಆರಂಭಿಸಿತು. ಹೈಕೋರ್ಟ್ನ ನಿರ್ದೇಶನಗಳನ್ನು ಪಾಲಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲು ಸುಮಾರು 17 ಬುಲ್ಡೋಜರ್ಗಳನ್ನು ಬಳಸಲಾಗಿತ್ತು ಎನ್ನಲಾಗಿದೆ.
ಕಾರ್ಯಾಚರಣೆ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಪೊಲೀಸರು ವ್ಯಾಪಕ ಬಂದೋಬಸ್ತ್ ಏರ್ಪಡಿಸಿದ್ದರು. ಒಟ್ಟು ಪ್ರದೇಶವನ್ನು ಒಂಬತ್ತು ವಲಯಗಳಾಗಿ ವಿಂಗಡಿಸಿ, ಪ್ರತಿಯೊಂದು ವಲಯಕ್ಕೂ ಒಬ್ಬ ಹೆಚ್ಚುವರಿ ಪೊಲೀಸ್ ಉಪ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿತ್ತು. ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ, ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಈ ವೇಳೆ ಉಂಟಾದ ಗೊಂದಲದಲ್ಲಿ 4-5 ಮಂದಿ ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಡಿಸಿಪಿ ನಿಧಿನ್ ವಲ್ಸನ್ ಖಚಿತಪಡಿಸಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದೇವರಾಜ ಅರಸು ದಾಖಲೆ ದಾಟಿದರೇ ಸಿದ್ದರಾಮಯ್ಯ?
ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. “ಕೆಲವರು ಅಶಾಂತಿ ಸೃಷ್ಟಿಸಲು ಯತ್ನಿಸಿದರು. ಆದರೆ, ಕನಿಷ್ಠ ಬಲ ಪ್ರಯೋಗದ ಮೂಲಕ ಪರಿಸ್ಥಿತಿಯನ್ನು ತ್ವರಿತವಾಗಿ ಹತೋಟಿಗೆ ತರಲಾಯಿತು,” ಎಂದು ದೆಹಲಿ ಪೊಲೀಸ್ ಜಂಟಿ ಆಯುಕ್ತ (ಕೇಂದ್ರ ವಲಯ) ಮಧುರ್ ವರ್ಮಾ ತಿಳಿಸಿದ್ದಾರೆ.
ಕಾರ್ಯಾಚರಣೆಗೂ ಮುನ್ನವೇ ಪೊಲೀಸರು ಮತ್ತು ಪಾಲಿಕೆ ಅಧಿಕಾರಿಗಳು ಸ್ಥಳೀಯ ಅಮನ್ ಸಮಿತಿ ಹಾಗೂ ಮುಖಂಡರೊಂದಿಗೆ ಹಲವು ಸುತ್ತಿನ ಸಭೆಗಳನ್ನು ನಡೆಸಿ, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು. ಆದರೂ ಅನಿರೀಕ್ಷಿತವಾಗಿ ಕಲ್ಲು ತೂರಾಟ ನಡೆದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಬಾಡಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ, ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪರಿಸ್ಥಿತಿ ಶಾಂತಿಯುತವಾಗಿದ್ದು, ಒತ್ತುವರಿ ತೆರವು ಪ್ರಕ್ರಿಯೆ ಮುಂದುವರಿದಿದೆ.





