ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮಹಾಘಟಬಂಧನ್ ಹಿನ್ನಡೆ ಅನುಭವಿಸಿದ ಬೆನ್ನಲ್ಲೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣೆ ಮೊದಲಿನಿಂದಲೂ ನ್ಯಾಯಯುತವಾಗಿರಲಿಲ್ಲ ಎಂದು ಹೇಳಿದರು.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಮಹಾಘಟಬಂಧನ್ ಬೆಂಬಲಿಸಿದ ಮತದಾರರಿಗೆ ಧನ್ಯವಾದ ಅರ್ಪಿಸಿದರು. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ವಿರೋಧ ಪಕ್ಷಗಳು ತಮ್ಮ ಹೋರಾಟವನ್ನು ಇನ್ನಷ್ಟು ಬಲಪಡಿಸುತ್ತವೆ ಎಂದು ಹೇಳಿದರು.
“ಮಹಾಘಟಬಂಧನ್ ಮೇಲೆ ನಂಬಿಕೆ ಇಟ್ಟ ಬಿಹಾರದ ಲಕ್ಷಾಂತರ ಮತದಾರರಿಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ. ಬಿಹಾರದಲ್ಲಿನ ಈ ಫಲಿತಾಂಶ ನಿಜಕ್ಕೂ ಆಶ್ಚರ್ಯಕರವಾಗಿದೆ. ಮೊದಲಿನಿಂದಲೇ ನ್ಯಾಯಸಮ್ಮತವಾಗಿರದ ಚುನಾವಣೆಯಲ್ಲಿ ನಾವು ಗೆಲ್ಲಲು ಸಾಧ್ಯವಾಗಲಿಲ್ಲ” ಎಂದು ಹೇಳಿದರು.
ಬಿಹಾರ ತೀರ್ಪನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಹಿನ್ನಡೆ ಎಂದು ಕರೆದ ರಾಹುಲ್ ಗಾಂಧಿ, ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟವು ಫಲಿತಾಂಶಗಳ ಬಗ್ಗೆ ಆಳವಾಗಿ ಪರಿಶೀಲನೆ ನಡೆಸುತ್ತದೆ ಎಂದು ಹೇಳಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರದಲ್ಲಿ ಗೆದ್ದಿದ್ದು ಜನತಂತ್ರವವೋ ಅಥವಾ ಮತಗಳ್ಳತನವೋ?
ಈ ಹೋರಾಟ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಮೈತ್ರಿಕೂಟ ಈ ಫಲಿತಾಂಶಗಳನ್ನು ಆಳವಾಗಿ ಪರಿಶೀಲಿಸುತ್ತದೆ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ತಮ್ಮ ಪ್ರಯತ್ನಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸುತ್ತದೆ ಎಂದು ಹೇಳಿದರು.
2025 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) 202 ಸ್ಥಾನಗಳನ್ನು ಗಳಿಸಿದರೆ, ಮಹಾಘಟಬಂಧನ್ (ಎಂಜಿಬಿ) 35 ಸ್ಥಾನಗಳನ್ನು ಪಡೆದಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದು, ಬಿಹಾರದಲ್ಲಿ ಪಕ್ಷವು ಜನಾದೇಶವನ್ನು ಗೌರವಿಸುತ್ತದೆ, ಆದರೆ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಶಕ್ತಿಗಳ ವಿರುದ್ಧ ತನ್ನ ಹೋರಾಟವನ್ನು ಮುಂದುವರಿಸುತ್ತದೆ ಎಂದು ಹೇಳಿದರು.
“ಕಾಂಗ್ರೆಸ್ ಫಲಿತಾಂಶಗಳನ್ನು ವಿವರವಾಗಿ ಅಧ್ಯಯನ ಮಾಡುತ್ತದೆ. ಮಹಾಘಟಬಂಧನ್ ಬೆಂಬಲಿಸಿದ ಮತದಾರರಿಗೆ ಧನ್ಯವಾದಗಳು. ಪಕ್ಷದ ಕಾರ್ಯಕರ್ತರು ನಿರಾಶೆಗೊಳ್ಳಬಾರದು. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟವು ಪೂರ್ಣ ದೃಢಸಂಕಲ್ಪದೊಂದಿಗೆ ಮುಂದುವರಿಯುತ್ತದೆ” ಎಂದು ಖರ್ಗೆ ತಿಳಿಸಿದ್ದಾರೆ.
ಕಾಂಗ್ರೆಸ್ ವಕ್ತಾರ ಪವನ್ ಖೇರಾ ಪ್ರತಿಕ್ರಿಯೆ ನೀಡಿ, ಆರಂಭಿಕ ಪ್ರವೃತ್ತಿಗಳು “ಜ್ಞಾನೇಶ್ ಕುಮಾರ್ ಬಿಹಾರದ ಜನರ ವಿರುದ್ಧ ಯಶಸ್ವಿಯಾಗುತ್ತಿದ್ದಾರೆ. ಸ್ಪರ್ಧೆಯು ಇನ್ನು ಮುಂದೆ ರಾಜಕೀಯ ಪಕ್ಷಗಳ ನಡುವೆ ಅಲ್ಲ, ಜ್ಞಾನೇಶ್ ಕುಮಾರ್ ಮತ್ತು ಭಾರತದ ಜನರ ನಡುವಿನ ನೇರ ಹೋರಾಟ” ಎಂದು ಹೇಳಿದ್ದಾರೆ.





