ಹರಿಯಾಣದಲ್ಲಿ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಸಾವು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇದೇ ಹೊತ್ತಿನಲ್ಲಿ, ಹರಿಯಾಣದ ಮತ್ತೊಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಮೃತ ಅಧಿಕಾರಿಯನ್ನು ರೋಹ್ಟಕ್ನ ಸೈಬರ್ ಸೆಲ್ನಲ್ಲಿ ಸಹಾಯಕ ಸಬ್-ಇನ್ಸ್ಪೆಕ್ಟರ್ (ಎಎಸ್ಐ) ಸಂದೀಪ್ ಕುಮಾರ್ ಎಂದು ಹೆಸರಿಸಲಾಗಿದೆ. ಸಂದೀಪ್ ಅವರು ಮೃತ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳ ಕುರಿತು ವಿಡಿಯೋ ಮಾಡಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೊಲೀಸರ ಪ್ರಕಾರ, ರೋಹ್ಟಕ್ನ ಲಧೌತ್-ಧಮರ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಗುಂಡೇಟಿನ ಗಾಯಗಳೊಂದಿಗೆ ಸಂದೀಪ್ ಅವರ ದೇಹವು ಪತ್ತೆಯಾಗಿದೆ. ಎಎಸ್ಐ ಸ್ವತಃ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.
ಸಾವಿಗೆ ಮುನ್ನ ಸಂದೀಪ್ ವಿಡಿಯೋವೊಂದನ್ನು ರೆಕಾರ್ಡ್ ಮಾಡಿಟ್ಟಿದ್ದಾರೆ. ಅದರಲ್ಲಿ; ವೈ ಪೂರಣ್ ಕುಮಾರ್ ಒಬ್ಬ ‘ಭ್ರಷ್ಟ ಪೊಲೀಸ್ ಅಧಿಕಾರಿ’ ಆಗಿದ್ದರು. ತನ್ನ ಭ್ರಷ್ಟಾಚಾರ ಬಯಲಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
“ವೈ ಪೂರಣ್ ಕುಮಾರ್ ಅವರನ್ನು ರೋಹ್ಟಕ್ ವ್ಯಾಪ್ತಿಗೆ ನಿಯೋಜಿಸಿದ ನಂತರ, ಅವರು ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿ, ಭ್ರಷ್ಟ ಅಧಿಕಾರಿಗಳನ್ನು ನಿಯೋಜಿಸಿಕೊಳ್ಳಲು ಆರಂಭಿಸಿದ್ದರು. ಎಲ್ಲ ಭ್ರಷ್ಟ ಅಧಿಕಾರಿಗಳು ಸೇರಿ ಕಡತಗಳನ್ನು ನಿರ್ಬಂಧಿಸುತ್ತಿದ್ದರು. ದೂರುದಾರರಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ವರ್ಗಾವಣೆಗಾಗಿ ಮನವಿ ಮಾಡುತ್ತಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು” ಎಂದು ಆರೋಪಿಸಿದ್ದಾರೆ.
ವೈ ಪೂರಣ್ ಕುಮಾರ್ ಸಾವಿಗೆ ಸಂಬಂಧಿಸಿದಂತೆ ಎಫ್ಐಆರ್ನಲ್ಲಿ ಹೆಸರಿಸಲಾದ ಅಧಿಕಾರಿಗಳಲ್ಲಿ ಒಬ್ಬರಾದ ರೋಹ್ಟಕ್ನ ಮಾಜಿ ಎಸ್ಪಿ ನರೇಂದ್ರ ಬಿಜಾರ್ನಿಯಾ ಅವರಿಗೆ ಸಂದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ವಿಡಿಯೋವನ್ನು ವಶಕ್ಕೆ ಪಡೆಸಿರುವ ರೋಹ್ಟಕ್ ಪೊಲೀಸ್ ವರಿಷ್ಠಾಧಿಕಾರಿ ಎಸ್ ಎಸ್ ಭೋರಿಯಾ, “ಈಗಲೇ ಏನನ್ನೂ ಹೇಳುವುದು ಕಷ್ಟ… ವಿಧಿವಿಜ್ಞಾನ ತಂಡ ತನಿಖೆ ನಡೆಸುತ್ತಿದೆ. ತನಿಖೆ ಮತ್ತು ವರದಿ ಬಂದ ಬಳಿಕ ಸ್ಪಷ್ಟತೆ ಸಿಗಲಿದೆ” ಎಂದು ಹೇಳಿದ್ದಾರೆ.
ಈ ದಿನ ಸಂಪಾದಕೀಯ?: ‘ಅನ್ನಭಾಗ್ಯ’ ಯೋಜನೆಯಲ್ಲಿ ‘ಇಂದಿರಾ ಕಿಟ್’; ಪೌಷ್ಠಿಕ ಆಹಾರ ಪೂರೈಕೆಗೆ ಹೊಸ ಮೈಲಿಗಲ್ಲು
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹತ್ಯೆಗೀಡಾದ ಪೊಲೀಸ್ ವೈ ಪೂರಣ್ ಕುಮಾರ್ ಅವರ ‘ಡೆತ್ನೋಟ್’ನಲ್ಲಿ ಹೆಸರಿಸಲಾದ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಪೂರಣ್ ಕುಮಾರ್ ಅವರ ಕುಟುಂಬವನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ಈ ಪ್ರಕರಣವು ಎಲ್ಲ ದಲಿತ ಕುಟುಂಬಗಳ ಮೇಲೆ ಪರಿಣಾಮ ಬೀರುತ್ತದೆ. ಪೂರಣ್ ಅವರ ಸ್ಥೈರ್ಯ ಕುಗ್ಗಿಸುವ ಮತ್ತು ಅವರ ವೃತ್ತಿಜೀವನಕ್ಕೆ ಹಾನಿ ಮಾಡುವ ಉದ್ದೇಶದಿಂದ ವ್ಯವಸ್ಥಿತ ತಾರತಮ್ಯ ಎಸಗಲಾಗಿದೆ ಎಂಬುದಾಗಿ ಪೂರಣ್ ಅವರ ಕುಟುಂಬ ಆರೋಪಿಸಿದೆ” ಎಂದು ವಿವರಿಸಿದ್ದಾರೆ.
ಅಕ್ಟೋಬರ್ 7ರಂದು ಆತ್ಮಹತ್ಯೆ ಮಾಡಿಕೊಂಡ ಪೂರಣ್ ಅವರು, ಎಂಟು ಪುಟಗಳ ಡೆತ್ನೋಟ್ ಬರೆದಿಟ್ಟಿದ್ದರು. ಅದರಲ್ಲಿ, ಕಪೂರ್ ಮತ್ತು ಬಿಜರ್ನಿಯಾ ಸೇರಿದಂತೆ ಎಂಟು ಹಿರಿಯ ಐಪಿಎಸ್ ಅಧಿಕಾರಿಗಳ ಮೇಲೆ ಜಾತಿ ಆಧಾರಿತ ತಾರತಮ್ಯ, ಮಾನಸಿಕ ಕಿರುಕುಳ, ಸಾರ್ವಜನಿಕ ಅವಮಾನ ಹಾಗೂ ಅಧಿಕಾರ ದುರುಪಯೋಗದ ಆರೋಪ ಮಾಡಿದ್ದರು.
ಸಾವಿನ ಎರಡು ದಿನಗಳ ನಂತರ, ಚಂಡೀಗಢ ಪೊಲೀಸರು ಅವರ ಆತ್ಮಹತ್ಯೆ ಪತ್ರದಲ್ಲಿ ಹೆಸರಿಸಲಾದವರ ವಿರುದ್ಧ ಬಿಎನ್ಎಸ್ ಮತ್ತು ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ.




