ಅಕ್ರಮ ಗಣಿಗಾರಿಕೆಯಿಂದ ಪರಿಸರಕ್ಕೆ ಸರಿಪಡಿಸಲಾಗದಂತಹ ಶಾಶ್ವತ ಹಾನಿಯಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಅರಾವಳಿ ಬೆಟ್ಟಗಳ ಪ್ರದೇಶದಲ್ಲಿನ ಗಣಿಗಾರಿಕೆ ಮತ್ತು ಸಂಬಂಧಿತ ಸಮಸ್ಯೆಗಳ ಸಮಗ್ರ ಪರಿಶೀಲನೆಗಾಗಿ ವಿಷಯ ತಜ್ಞರ ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ.
ಮುಖ್ಯನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಪರಿಸರವಾದಿಗಳು, ವಿಜ್ಞಾನಿಗಳು ಮತ್ತು ಗಣಿಗಾರಿಕೆ ತಜ್ಞರ ಹೆಸರನ್ನು ನಾಲ್ಕು ವಾರಗಳ ಒಳಗೆ ಸೂಚಿಸುವಂತೆ ಸಂಬಂಧಪಟ್ಟ ವಕೀಲರಿಗೆ ನಿರ್ದೇಶನ ನೀಡಿದ್ದು, ಈ ಸಮಿತಿಯು ನ್ಯಾಯಾಲಯದ ನೇರ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸಲಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪಲ್ಲ
ಅರಾವಳಿ ಬೆಟ್ಟಗಳ ವ್ಯಾಖ್ಯಾನಕ್ಕೆ ಸಂಬಂಧಿಸಿದಂತೆ ಇದ್ದ ಗೊಂದಲಗಳನ್ನು ಬಗೆಹರಿಸುವ ನಿಟ್ಟಿನಲ್ಲಿ, ನವೆಂಬರ್ 20ರಂದು ನೀಡಿದ್ದ ಆದೇಶಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನು ನ್ಯಾಯಾಲಯ ವಿಸ್ತರಿಸಿದೆ. ಬೆಟ್ಟಗಳ ಎತ್ತರ ಮತ್ತು ಅಂತರದ ಮಾನದಂಡಗಳು ಅರಾವಳಿಯ ಬಹುಭಾಗವನ್ನು ರಕ್ಷಣಾ ವ್ಯಾಪ್ತಿಯಿಂದ ಹೊರಗಿಡಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಇದೇ ವೇಳೆ, ಯಾವುದೇ ಕಾರಣಕ್ಕೂ ಅನಧಿಕೃತ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ರಾಜಸ್ಥಾನ ಸರ್ಕಾರವು ನ್ಯಾಯಾಲಯಕ್ಕೆ ಭರವಸೆ ನೀಡಿದೆ. ದೆಹಲಿ, ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್ ವ್ಯಾಪ್ತಿಯ ಅರಾವಳಿ ಶ್ರೇಣಿಯನ್ನು ರಕ್ಷಿಸಲು ವೈಜ್ಞಾನಿಕ ಅಧ್ಯಯನದ ಅಗತ್ಯವಿದೆ ಎಂದು ಕೋರ್ಟ್ ಪ್ರತಿಪಾದಿಸಿದೆ.





