ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಗೆಲುವು ಸಾಧಿಸಲಿದ್ದು, 48 ಗಂಟೆಯಲ್ಲಿ ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಸುದ್ದಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು, ಮೈತ್ರಿಕೂಟದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಪಕ್ಷ ಸ್ವಾಭಾವಿಕವಾಗಿ ನಾಯಕತ್ವ ವಹಿಸಿಕೊಳ್ಳುತ್ತದೆ ಎಂದು ಹೇಳಿದ್ದಾರೆ.
‘ಇಂಡಿಯಾ ಮೈತ್ರಿಕೂಟವು ಸರಳ ಬಹುಮತಕ್ಕೆ ಅಗತ್ಯವಿರುವ 272ಕ್ಕಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇಂಡಿಯಾ ಒಕ್ಕೂಟದ ಪಕ್ಷದ ಪರವಾಗಿ ಜನಾಭಿಪ್ರಾಯ ಇರಲಿದೆ. ಎನ್ಡಿಎ ಮೈತ್ರಿಕೂಟದ ಕೆಲವೊಂದು ಪಕ್ಷಗಳು ನಮ್ಮ ಮೈತ್ರಿಗೆ ಸೇರಲಿವೆ. ಅವರನ್ನು ಸೇರಿಸುವ ಬಗ್ಗೆ ಕಾಂಗ್ರೆಸ್ ಹೈ ಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಪ್ರಾಯಶ್ಚಿತ್ತಕ್ಕಾಗಿ ಮೋದಿ ಕನ್ಯಾಕುಮಾರಿಗೆ ಹೋಗಬೇಕೆಂದುಕೊಂಡಿದ್ದರೆ ಒಳ್ಳೆಯದು: ಕಪಿಲ್ ಸಿಬಲ್
‘ನಾವು ಬಹು ದೊಡ್ಡ ವಿಜಯ ಸಾಧಿಸುತ್ತೇವೆ. ನಮ್ಮಲ್ಲಿ ಸೇಡಿನ ರಾಜಕಾರಣವಿಲ್ಲ. ಭಾರತ ಪ್ರಕಾಶಿಸುತ್ತಿದೆ ಎಂದು 2004ರಲ್ಲಿ ಬಿಜೆಪಿ ಪ್ರಚಾರ ಮಾಡಿದರೂ, ಕಾಂಗ್ರೆಸ್ ಗೆಲುವು ಸಾಧಿಸಿ ಮೈತ್ರಿ ಸರ್ಕಾರ ರಚಿಸಿತ್ತು. 2024ರಲ್ಲಿ ಅದೇ ಪುನರಾವರ್ತನೆಯಾಗಲಿದೆ. ರಾಜಸ್ಥಾನ, ಕರ್ನಾಟಕ, ತೆಲಂಗಾಣ ಮತ್ತು ಮಹಾರಾಷ್ಟ್ರಗಳಲ್ಲಿ ಕಾಂಗ್ರೆಸ್ ಹೆಚ್ಚು ಸೀಟು ಗಳಿಸಲಿದೆ. ಛತ್ತೀಸಗಢ, ಮಧ್ಯ ಪ್ರದೇಶ ಹಾಗೂ ಅಸ್ಸಾಂನಲ್ಲಿ ನಾವು ಉತ್ತಮ ಪ್ರದರ್ಶನ ನೀಡಲಿದ್ದೇವೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ನ ಸೀಟು ಗಳಿಕೆ ಹೆಚ್ಚಳವಾಗಲಿದೆ. ಬಿಜೆಪಿ 2019ರಲ್ಲಿ ಗಳಿಸಿದ್ದಕ್ಕಿಂತ ಕಡಿಮೆ ಸ್ಥಾನಗಳಲ್ಲಿ ಗೆಲ್ಲಲಿದೆ. ಪಶ್ಚಿಮ ಬಂಗಾಳದಲ್ಲೂ ಅವರು ಕಡಿಮೆ ಸ್ಥಾನ ಗಳಿಸಲಿದ್ದಾರೆ ಎಂದು ಹೇಳಿದರು





