ಬುಧವಾರ ಕೋಲ್ಕತ್ತಾದಿಂದ ಶ್ರೀನಗರಕ್ಕೆ ಹಾರುತ್ತಿದ್ದ ಇಂಡಿಗೋ ವಿಮಾನ ವಾರಣಾಸಿ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಲ್ಯಾಂಡ್ ಆಗಿದೆ. ವಿಮಾನದಲ್ಲಿ ಇಂಧನ ಸೋರಿಕೆ ಕಂಡುಬಂದ ಕಾರಣ ತುರ್ತಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ವರದಿಯಾಗಿದೆ.
166 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ 6E-6961 ವಿಮಾನವು ಸಂಜೆ 4.10ಕ್ಕೆ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ರನ್ವೇಯಲ್ಲೇ ಊಟ ಮಾಡಿದ ವಿಮಾನ ಪ್ರಯಾಣಿಕರು: ವಿಡಿಯೋ ವೈರಲ್; ‘ಇಂಡಿಗೋ’ ಸಂಸ್ಥೆಗೆ ನೋಟಿಸ್
ವಿಮಾನದಲ್ಲಿದ್ದ ಎಲ್ಲರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ವಾರಣಾಸಿ ಪೊಲೀಸರು ಮತ್ತು ವಿಮಾನ ನಿಲ್ದಾಣ ಅಧಿಕಾರಿಗಳ ಪ್ರಕಾರ, ಇಂಧನ ಸೋರಿಕೆಯನ್ನು ಗಮನಿಸಿದ ಪೈಲಟ್ ತಕ್ಷಣ ವಾಯು ಸಂಚಾರ ನಿಯಂತ್ರಣಕ್ಕೆ ಎಚ್ಚರಿಕೆ ನೀಡಿದರು.
ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ತಾಂತ್ರಿಕ ತಂಡಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿವೆ. ಪರಿಸ್ಥಿತಿ ಪ್ರಸ್ತುತ ನಿಯಂತ್ರಣದಲ್ಲಿದೆ. ಸಾಮಾನ್ಯ ವಿಮಾನ ನಿಲ್ದಾಣ ಕಾರ್ಯಾಚರಣೆಗಳು ಪುನರಾರಂಭಗೊಂಡಿವೆ. ಅಗತ್ಯ ತಪಾಸಣೆ ಮತ್ತು ದುರಸ್ತಿಗಳ ನಂತರ ವಿಮಾನವು ಶ್ರೀನಗರಕ್ಕೆ ಪ್ರಯಾಣ ಮುಂದುವರೆಸಲಿದೆ ಎಂದು ವರದಿಯಾಗಿದೆ.





