ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಯನ್ನು ಕೆಡವಿ, ನಾಲೆಗೆ ಎಸೆದು ವಿಕೃತಿ ಮೆರೆದಿರುವ ಘಟನೆ ಉತ್ತರ ಪ್ರದೇಶದ ಗಂಗಾನಗರ ಬಳಿಯ ಕೊಡಾಪುರ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದಾಗಿ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವಿವಾದವಿದ್ದ ಹೊಲದ ರಸ್ತೆಯೊಂದರಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಪ್ರತಿಮೆ ನಿರ್ಮಾಣದ ವಿಚಾರವಾಗಿ ಗ್ರಾಮದಲ್ಲಿ ಹಲವರ ನಡುವೆ ವೈಮನಸ್ಯವಿತ್ತು ಎಂದು ಹೇಳಲಾಗಿದೆ.
ಆ ಪ್ರತಿಮೆಯನ್ನು ಅಪರಿಚಿತ ದುಷ್ಕರ್ಮಿಗಳು ಕೆಡವಿದ್ದಾರೆ. ಬಳಿಕ, ಗ್ರಾಮದ ಬಳಿ ಇರುವ ನಾಲೆಗೆ ಎಸೆದಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಗಂಗಾನಗರ ಉಪ ಪೊಲೀಸ್ ಆಯುಕ್ತ ಕುಲದೀಪ್ ಗುಣಾವತ್ PTI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಪ್ರತಿಮೆ ಇದ್ದ ಸ್ಥಳದಲ್ಲೇ ತ್ವರಿತವಾಗಿ ಅಂಬೇಡ್ಕರ್ ಅವರ ನೂತನ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ.




