ಆಸ್ಪತ್ರೆಯು ಆ್ಯಂಬುಲೆನ್ಸ್ ಸೌಲಭ್ಯ ಒದಗಿಸದ ಕಾರಣ ಬುಡಕಟ್ಟು ಕುಟುಂಬವೊಂದು ತನ್ನ ನಾಲ್ಕು ತಿಂಗಳ ಮಗುವಿನ ಮೃತದೇಹವನ್ನು ಆಸ್ಪತ್ರೆಯಿಂದ ತಮ್ಮೂರಿಗೆ ಪ್ಲಾಸ್ಟಿಕ್ ಚೀಲದಲ್ಲಿ ಸಾಗಿಸಿರುವ ಹೃದಯವಿದ್ರಾವಕ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.
ಜಾರ್ಖಂಡ್ನ ನೊಮುಂಡಿ ಪ್ರದೇಶದ ಬಲ್ಜೋರಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ನಿವಾಸಿ ದಿಂಬಾ ಚತೊಂಬ ಅವರು ಅನಾರೋಗ್ಯಕ್ಕೊಳಗಾಗಿದ್ದ ತನ್ನ ಮಗುವನ್ನು ಚೈಬಾಸಾದ ಸದರ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ, ಮಗು ಸಾವನ್ನಪ್ಪಿದೆ. ಮಗುವಿನ ಮೃತದೇಹವನ್ನು ತಮ್ಮ ಗ್ರಾಮಕ್ಕೆ ಕೊಂಡೊಯ್ಯಲು ಆ್ಯಂಬುಲೆನ್ಸ್ ಒದಗಿಸುವಂತೆ ಚತೊಂಬ ಅವರು ಕೇಳಿದ್ದಾರೆ. ಆದರೆ, ಆಸ್ಪತ್ರೆ ಆಡಳಿತ ಮಂಡಳಿ ಆ್ಯಂಬುಲೆನ್ಸ್ ಒದಗಿಸಲು ನಿರಾಕರಿಸಿದೆ ಎಂದು ಆರೋಪಿಸಲಾಗಿದೆ.
ಚತೊಂನ ಅವರ ಬಳಿ ಕೇವಲ 100 ರೂ. ಇದ್ದಿದ್ದರಿಂದ, ಖಾಸಗಿ ವಾಹನವನ್ನು ಬಾಡಿಗೆಗೆ ಪಡೆಯಲಾಗದೆ, ಕುಟುಂಬವು ಪ್ಲಾಸ್ಟಿಕ್ ಚೀಲವೊಂದನ್ನು ಖರೀದಿಸಿ, ಅದರಲ್ಲಿ ಮಗುವಿನ ಮೃತದೇಹವನ್ನು ಇಟ್ಟುಕೊಂಡು ಬಸ್ನಲ್ಲಿ ತಮ್ಮೂರಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ.
ಘಟನೆ ಕುರಿತು ಪಶ್ಚಿಮ ಸಿಂಗ್ ಭೂಮ್ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ. ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಚಂದನ್ ಕುಮಾರ್ ತಿಳಿಸಿದ್ದಾರೆ. ತನಿಖಟ ವರದಿ ಬಂದ ಬಳಿಕ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಇರ್ಫಾನ್ ಅನ್ಸಾರಿ ಭರವಸೆ ನೀಡಿದ್ದಾರೆ.




