ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ನೀಡದ್ದ 370ನೇ ವಿಧಿಯನ್ನು ರದ್ದುಗೊಳಿಸುವುದು, ಬಿಹಾರದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಪೆಗಾಸಸ್ ಸ್ಪೈವೇರ್ ಪ್ರಕರಣ ಸೇರಿದಂತೆ ಹಲವು ತೀರ್ಪುಗಳು ಮತ್ತು ಆದೇಶಗಳನ್ನು ನೀಡಿದ ಸುಪ್ರೀಂ ಕೋರ್ಟ್ನ ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸೋಮವಾರ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ನಿವೃತ್ತರಾಗಲಿದ್ದಾರೆ.
ನ್ಯಾಯಮೂರ್ತಿ ಕಾಂತ್ ಅವರನ್ನು ಅಕ್ಟೋಬರ್ 30ರಂದು ಮುಂದಿನ ಸಿಜೆಐ ಆಗಿ ನೇಮಿಸಲಾಗಿದ್ದು, ಸುಮಾರು 15 ತಿಂಗಳುಗಳ ಕಾಲ ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ. ಹಾಗೆಯೇ ಅವರಿಗೆ 65 ವರ್ಷವಾಗುತ್ತಿದ್ದಂತೆ 2027ರ ಫೆಬ್ರವರಿ 9ರಂದು ನಿವೃತ್ತಿ ಹೊಂದಲಿದ್ದಾರೆ.
ಇದನ್ನು ಓದಿದ್ದೀರಾ? ಶರದ್ ಪವಾರ್ ಬಣಕ್ಕೆ ಹೊಸ ಹೆಸರು ಸೂಚಿಸಿದ ಸುಪ್ರೀಂ ಕೋರ್ಟ್
1962ರ ಫೆಬ್ರವರಿ 10ರಂದು ಹರಿಯಾಣದ ಹಿಸಾರ್ ಜಿಲ್ಲೆಯಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ನ್ಯಾಯಮೂರ್ತಿ ಕಾಂತ್ ಅವರು, ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲಿ(Distance Education) 2011ರಲ್ಲಿ ಕಾನೂನು ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನಲ್ಲಿ ಹಲವಾರು ಗಮನಾರ್ಹ ತೀರ್ಪುಗಳನ್ನು ನೀಡಿದ ನ್ಯಾಯಮೂರ್ತಿ ಕಾಂತ್ ಅವರನ್ನು 2018ರ ಅಕ್ಟೋಬರ್ 5ರಂದು ಹಿಮಾಚಲ ಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ. ಅದಾದ ಬಳಿಕ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದು, 370ನೇ ವಿಧಿ ರದ್ದತಿ, ವಾಕ್ ಸ್ವಾತಂತ್ರ್ಯ ಮತ್ತು ಪೌರತ್ವ ಹಕ್ಕುಗಳ ಕುರಿತ ತೀರ್ಪುಗಳನ್ನು ನೀಡಿದ್ದಾರೆ.
ದೇಶದ್ರೋಹ ಕಾನೂನನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದ, ಸರ್ಕಾರ ಪರಿಶೀಲನೆ ನಡೆಸುವವರೆಗೂ ಯಾವುದೇ ಹೊಸ ಎಫ್ಐಆರ್ಗಳನ್ನು ದಾಖಲಿಸಬಾರದು ಎಂದು ನಿರ್ದೇಶಿಸಿದ್ದರು. ಇನ್ನು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸುವ ಚುನಾವಣಾ ಸಮಿತಿಯ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನೂ ನ್ಯಾಯಮೂರ್ತಿ ಸೂರ್ಯಕಾಂತ್ ನಡೆಸಿದ್ದರು. ಕರಡು ಮತದಾರರ ಪಟ್ಟಿಯಿಂದ ಹೊರಗುಳಿದ 65 ಲಕ್ಷ ಮತದಾರರ ವಿವರಗಳನ್ನು ಬಹಿರಂಗಪಡಿಸುವಂತೆ ನ್ಯಾಯಮೂರ್ತಿ ಕಾಂತ್ ಚುನಾವಣಾ ಆಯೋಗಕ್ಕೆ ಸೂಚಿಸಿದ್ದರು.
ಇನ್ನು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಸೇರಿದಂತೆ ಬಾರ್ ಅಸೋಸಿಯೇಷನ್ಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಬೇಕೆಂದು ನಿರ್ದೇಶಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ. ಕಾನೂನುಬಾಹಿರವಾಗಿ ಪದಚ್ಯುತಗೊಳಿಸಲಾದ ಮಹಿಳಾ ಸರಪಂಚರನ್ನು ಪುನಃ ನೇಮಿಸಿದ ಪೀಠದ ನೇತೃತ್ವ ವಹಿಸಿದ್ದ ಅವರು ಲಿಂಗ ಪಕ್ಷಪಾತವನ್ನು ಟೀಕಿಸಿದ್ದರು.
ಇದನ್ನು ಓದಿದ್ದೀರಾ? ಮತದಾರರ ಪಟ್ಟಿಯಿಂದ ಅಳಿಸಲಾದ 65 ಲಕ್ಷ ಜನರ ಗುರುತು, ಕಾರಣ ಬಹಿರಂಗಪಡಿಸಿ: ಇಸಿಗೆ ಸುಪ್ರೀಂ ಸೂಚನೆ
ಇನ್ನು 2022ರಲ್ಲಿ ಪ್ರಧಾನಿ ನರೇಂದ್ರ ಮೋದಿ ಪಂಜಾಬ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದ ಭದ್ರತಾ ಉಲ್ಲಂಘನೆಯ ತನಿಖೆಗಾಗಿ ಮಲ್ಹೋತ್ರಾ ನೇತೃತ್ವದ ಮಾಜಿ ನ್ಯಾಯಮೂರ್ತಿಗಳ ಐವರು ಸದಸ್ಯರ ಸಮಿತಿಯನ್ನು ನೇಮಿಸಿದ ಪೀಠದಲ್ಲಿ ನ್ಯಾಯಮೂರ್ತಿ ಕಾಂತ್ ಇದ್ದರು. “ಇಂತಹ ವಿಷಯಗಳ ತನಿಖೆಗೆ ನ್ಯಾಯಾಂಗದಲ್ಲಿ ತರಬೇತಿ ಪಡೆದ ಮನಸ್ಸುಗಳ ಅಗತ್ಯವಿದೆ” ಎಂದು ಹೇಳಿದ್ದರು.
ಹಾಗೆಯೇ ನ್ಯಾಯಮೂರ್ತಿ ಕಾಂತ್ ಅವರು ರಕ್ಷಣಾ ಪಡೆಗಳಿಗೆ ಒನ್ ರ್ಯಾಂಕ್-ಒನ್ ಪಿಂಚಣಿ ಯೋಜನೆಯನ್ನು ಸಹ ಎತ್ತಿಹಿಡಿದಿದ್ದರು. “ಇದು ಸಾಂವಿಧಾನಿಕವಾಗಿ ಮಾನ್ಯವಾಗಿದೆ” ಎಂದು ಹೇಳಿದ್ದರು. 1967ರ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ತೀರ್ಪನ್ನು ರದ್ದುಗೊಳಿಸಿದ ಏಳು ನ್ಯಾಯಾಧೀಶರ ಪೀಠದಲ್ಲಿ ನ್ಯಾಯಮೂರ್ತಿ ಕಾಂತ್ ಇದ್ದರು. ಈ ತೀರ್ಪು ಸಂಸ್ಥೆಯ ಅಲ್ಪಸಂಖ್ಯಾತ ಸ್ಥಾನಮಾನದ ಮರುಪರಿಶೀಲನೆಗೆ ದಾರಿ ಮಾಡಿಕೊಟ್ಟಿತ್ತು.





