ಅಯೋಧ್ಯೆಯ ರಾಮ ಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ‘ರಾಮ್ ಲಲ್ಲಾ’ ವಿಗ್ರಹ ಜನವರಿ 22 ರಂದು ಪ್ರತಿಷ್ಠಾಪನೆಯಾಗಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದೃಢಪಡಿಸಿದೆ.
”ಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್ ಅವರಿಂದ ಕೃಷ್ಣ ಶಿಲೆಯಿಂದ ಕೆತ್ತಲಾದ ಮೂರ್ತಿಯನ್ನು ಭಗವಾನ್ ಶ್ರೀ ರಾಮಲಲ್ಲಾ ವಿಗ್ರಹವಾಗಿ ಆಯ್ಕೆ ಮಾಡಲಾಗಿದೆ” ಎಂದು ದೇಗುಲ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಇದೇ ಸಂದರ್ಭದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ದೇವಸ್ಥಾನದ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ”ಅಯೋಧ್ಯೆಯ ರಾಮಮಂದಿರದಲ್ಲಿ ಮೈಸೂರು ಮೂಲದ ಅರುಣ್ ಅವರು ನಿರ್ಮಿಸಿರುವ ರಾಮಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ
‘ಪ್ರಾಣ ಪ್ರತಿಷ್ಠಾ’ ಮಾಡಲಿರುವ ವಿಗ್ರಹವು ಸುಮಾರು 150-200 ಕೆ.ಜಿ.ಯಿದ್ದು ಜನವರಿ 18 ರಂದು, ವಿಗ್ರಹವನ್ನು ದೇವಾಲಯದ ‘ಗರ್ಭ ಗೃಹ’ದಲ್ಲಿ ಅದರ ಸ್ಥಾನದಲ್ಲಿ ಇರಿಸಲಾಗುತ್ತದೆ ಎಂದು ಚಂಪತ್ ರಾಯ್ ತಿಳಿಸಿದ್ದಾರೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ‘ರಾಮ್ ಲಲ್ಲಾ’ ವಿಗ್ರಹ ಪ್ರತಿಷ್ಠಾಪನೆಗೆ ಅರುಣ್ ಯೋಗಿರಾಜ್ ಸೇರಿದಂತೆ ಮೂವರು ಶಿಲ್ಪಿಗಳ ವಿಗ್ರಹಗಳನ್ನು ಆಯ್ಕೆ ಮಾಡಿತ್ತು.
ಅರುಣ್ ಅವರು ದೆಹಲಿಯ ಇಂಡಿಯಾ ಗೇಟ್ ಬಳಿಯಿರುವ ಸುಭಾಶ್ ಚಂದ್ರ ಬೋಸ್ ವಿಗ್ರಹ ಸೇರಿದಂತೆ ಹಲವು ವಿಗ್ರಹಗಳನ್ನು ಕೆತ್ತಿದ್ದಾರೆ. ಮಂದಿರದ ಉದ್ಘಾಟನೆಯು ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ನೆರವೇರಲಿದೆ.





