ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಮತ್ತೆ ತನಿಖೆ ಆರಂಭವಾದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮತ್ತು ಜಾರಿ ನಿರ್ದೇಶನಾಲಯವನ್ನು ಟೀಕಿಸಿದ್ದಾರೆ. ರಾಜಕೀಯ ದ್ವೇಷದಿಂದ ಮತ್ತೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಳ್ಳಲು ಮೋದಿ ಸರ್ಕಾರ ಹಳೆಯ ವಿಷಯವನ್ನು ಮತ್ತೆ ಮುನ್ನಲೆಗೆ ತರುತ್ತಿದೆ ಎಂದು ಆರೋಪಿಸಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೃತದೇಹದೊಂದಿಗೇ ಯುವತಿ ಮದುವೆ; ಮರ್ಯಾದೆಗೇಡು ಹತ್ಯೆಗಳಿಗೆ ಕೊನೆ ಎಂದು?
ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಗಾಂಧಿ ಕುಟುಂಬದ ಮೇಲೆ 12 ವರ್ಷಗಳ ಹಳೆಯ ಪ್ರಕರಣದಲ್ಲಿ ಹೊಸ ಎಫ್ಐಆರ್ ದಾಖಲಿಸಲಾಗಿದೆ. ಮೋದಿ ಸರ್ಕಾರ ಮತ್ತು ಜಾರಿ ನಿರ್ದೇಶನಾಲಯದ ಬಳಿ ಹೊಸ ಆರೋಪಗಳು ಇರದಿರುವುದೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ.
ಸತ್ಯಗಳು ಮಸುಕಾದಾಗ, ಹೊಸ ನಾಟಕ ಶುರುವಾಯಿತು. ಆಯ್ದ ಆರೋಪಿಗಳ ಮೇಲೆ ಮಾತ್ರ ಕೇಸು ದಾಖಲಿಸಿರುವುದು, ಮತ್ತೆ ಹಳೆಯ ಆರೋಪಗಳನ್ನೇ ಮಾಡುತ್ತಿರುವುದು ಎದುರಾಳಿಗಳನ್ನು ನ್ಯಾಯಾಲಯದಲ್ಲಿ ನಿಲ್ಲಿಸಿ ಕಿರುಕುಳ ನೀಡುವ ಪ್ರಯತ್ನವಾಗಿದೆ. ನ್ಯಾಯಾಲಯ ಈ ರಾಜಕೀಯ ಸೇಡಿನ ಆಟ ಮತ್ತು ಕಿರುಕುಳವನ್ನು ಸ್ಪಷ್ಟವಾಗಿ ಗುರುತಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.





