ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಯುಪಿಎ ಸರ್ಕಾರದ ಆಡಳಿತಾವಧಿಯನ್ನು ‘ಕಳೆದುಹೋದ ಅವಕಾಶಗಳ ದಶಕ’ ಎಂದು ಹೇಳಿದ್ದು ಲೋಕಸಭೆಯಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಯಿತು. ಸೂರ್ಯ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವಂದನಾ ನಿರ್ಣಯವನ್ನು ಅನುಮೋದಿಸಿ ಮಾತನಾಡಿದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಕಾಂಗ್ರೆಸ್ ನೇತೃತ್ವದ ಯುಪಿಎ ಮತ್ತು ಪ್ರಸ್ತುತ ಬಿಜೆಪಿ ಸರ್ಕಾರದ ನಡುವಿನ ವ್ಯತ್ಯಾಸವು ‘ನಾಯಕತ್ವದ ಗುಣಮಟ್ಟ’ದಲ್ಲಿದೆ ಎಂದು ಎಂದರು. ಯುಪಿಎ ಅಧಿಕಾರದಲ್ಲಿದ್ದ ಹತ್ತು ವರ್ಷಗಳು ಕೇವಲ ‘ನೆಪಗಳು ಮತ್ತು ಕಳೆದುಹೋದ ಅವಕಾಶಗಳಿಂದ’ ಕೂಡಿತ್ತು ಎಂದು ಅವರು ಹೇಳಿದರು. ಭಯೋತ್ಪಾದನೆ ನಿಗ್ರಹ, ಆಂತರಿಕ ಭದ್ರತೆ ಮತ್ತು ರಾಷ್ಟ್ರೀಯ ಅಭಿವೃದ್ಧಿಯ ವಿಷಯಗಳಲ್ಲಿ ಅಂದಿನ ಸರ್ಕಾರ ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳಲು ವಿಫಲವಾಗಿತ್ತು ಎಂದು ಅವರು ಆರೋಪಿಸಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ |ಮುಂಬಯಿ TISS ವಿದ್ಯಾರ್ಥಿಗಳ ‘ಕ್ಯಾಂಪಸ್ ರಾಜಕೀಯ’ ದಮನ ಸಲ್ಲದು!
ಇದಕ್ಕೆ ವ್ಯತಿರಿಕ್ತವಾಗಿ, ಮೋದಿ ಸರ್ಕಾರದ ಅಡಿಯಲ್ಲಿ ಭಾರತವು ಆರ್ಥಿಕ ಸ್ಥಿತಿಸ್ಥಾಪಕತ್ವವನ್ನು ಪ್ರದರ್ಶಿಸಿದೆ. ಜಾಗತಿಕ ಆರ್ಥಿಕ ಹಿಂಜರಿತದ ನಡುವೆಯೂ ಭಾರತವು ವಿಶ್ವದ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ ಮತ್ತು ಯುವಪೀಳಿಗೆಯ ನೇತೃತ್ವದ ಬೆಳವಣಿಗೆಯನ್ನು ಕಾಣುತ್ತಿದೆ ಎಂದು ಸೂರ್ಯ ಸಮರ್ಥಿಸಿಕೊಂಡರು.
ತೇಜಸ್ವಿ ಸೂರ್ಯ ಅವರು ಯುಪಿಎ ಆಡಳಿತದ ಬಗ್ಗೆ ಟೀಕೆಗಳನ್ನು ಆರಂಭಿಸುತ್ತಿದ್ದಂತೆಯೇ, ಕಾಂಗ್ರೆಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಪ್ರಮುಖ ನಾಯಕರು ಮತ್ತು ಸಂಸದರು ತಮ್ಮ ಆಸನಗಳಿಂದ ಎದ್ದುನಿಂತು ವಿರೋಧ ವ್ಯಕ್ತಪಡಿಸಿದರು. ಸೂರ್ಯ ಅವರ ಮಾತುಗಳು ಸದನದ ಘನತೆಗೆ ತಕ್ಕುದಲ್ಲ ಎಂದು ಆಕ್ಷೇಪಿಸಿದ ಕಾಂಗ್ರೆಸ್ ಸದಸ್ಯರು, ಆಡಳಿತ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದಾಗಿ ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.





