ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸುಮಾರು 25 ಮಂದಿ ವಿಷಕಾರಿ ‘ಫಿನೈಲ್’ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲ 25 ಮಂದಿಗೂ ಮಹಾರಾಜ ಯಶವಂತರಾವ್ ಸರ್ಕಾರಿ ಆಸ್ಪತ್ರೆಯಲ್ಲಿ (MYH) ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಉಸ್ತುವಾರಿ ಸೂಪರಿಂಟೆಂಡೆಂಟ್-ಇನ್-ಚಾರ್ಜ್ ಡಾ. ಬಸಂತ್ ಕುಮಾರ್ ನಿಂಗ್ವಾಲ್ ಹೇಳುವಂತೆ; “ಅವರೆಲ್ಲರೂ ಒಟ್ಟಿಗೆ ಫಿನೈಲ್ ಸೇವಿಸಿದ್ದಾಗಿ ಹೇಳಿಕೊಂಡಿದ್ದಾರೆ. ಸದ್ಯ, ಯಾವುದೇ ರೋಗಿಗಳ ಸ್ಥಿತಿ ಗಂಭೀರವಾಗಿಲ್ಲ. ಚಿಕಿತ್ಸೆ ನೀಡಲಾಗುತ್ತಿದೆ. ಪರೀಕ್ಷೆಗಳನ್ನು ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.
ಆದಾಗ್ಯೂ, ಲಿಂಗತ್ವ ಅಲ್ಪಸಂಖ್ಯಾತರ ಈ ಆಘಾತಕಾರಿ ನಿರ್ಧಾರಕ್ಕೆ ಕಾರಣವೇನು ಎಂಬುದು ಗೊತ್ತಾಗಿಲ್ಲ ಎಂದು ವರದಿಯಾಗಿದೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ರಾಜೇಶ್ ದಂಡೋಟಿಯಾ, “ಟ್ರಾನ್ಸ್ಜೆಂಡರ್ ಸಮುದಾಯದ ಜನರು ಯಾವ ವಿಷಕಾರಿ ವಸ್ತುವನ್ನು ಸೇವಿಸಿದ್ದಾರೆ. ಯಾಕೆ ಈ ನಿರ್ಧಾರ ಮಾಡಿದ್ದಾರೆ ಎಂಬುದು ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ” ಎಂದು ಹೇಳಿದ್ದಾರೆ.
ಎರಡು ಸ್ಥಳೀಯ ಗುಂಪುಗಳ ನಡುವಿನ ವಿವಾದವೂ ಈ ಘಟನೆಗೆ ಕಾರಣವಾಗಿರಬಹುದು ಎಂದು ಕೆಲವರು ಶಂಕಿಸಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.




