ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಲ್ಲದೆ, ಮಾನಸಿಕವಾಗಿ ಹಿಂಸಿಸುತ್ತಿದ್ದ ಆರೋಪದ ಮೇರೆಗೆ ಯುವತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಸ್ಥಳೀಯ ಬಿಜೆಪಿ ನಾಯಕಿ ಹಾಗೂ ಶಿವಪುರಿ ನಗರಸಭೆ ಅಧ್ಯಕ್ಷೆ ಗಾಯತ್ರಿ ಶರ್ಮಾ ಅವರ ಮಗ ರಜತ್ ಶರ್ಮಾ ಅವರ ಹೆಸರನ್ನು ಸಂತ್ರಸ್ತೆ ತನ್ನ ಮರಣಪತ್ರದಲ್ಲಿ ಉಲ್ಲೇಖಿಸಿದ್ದು, ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಪ್ರಸ್ತುತ ಸಂತ್ರಸ್ತೆಯು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ದೈಹಿಕ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಬುಧವಾರ (ಡಿ.24) ರಾತ್ರಿ ಸಂಭವಿಸಿದ ಈ ಘಟನೆಯಲ್ಲಿ, 25 ವರ್ಷದ ಸಂತ್ರಸ್ತೆಯು ಸುಮಾರು 25 ನಿದ್ರೆ ಮಾತ್ರೆಗಳನ್ನು ಇಲಿ ಪಾಷಾಣದೊಂದಿಗೆ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಆಕೆಯನ್ನು ತಕ್ಷಣವೇ ಶಿವಪುರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷದ ಪ್ರಮಾಣ ಹೆಚ್ಚಿರುವುದರಿಂದ ಆಕೆಯ ಸ್ಥಿತಿ ಗಂಭೀರವಾಗಿದೆ.
ಘಟನಾ ಸ್ಥಳದಿಂದ ಪೊಲೀಸರು ಆರು ಪುಟಗಳ ಸುದೀರ್ಘ ಮರಣ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ಸಂತ್ರಸ್ತೆಯು ತನ್ನ ಸಾವಿಗೆ ಶಿವಪುರಿ ನಗರಸಭೆ ಅಧ್ಯಕ್ಷೆ ಗಾಯತ್ರಿ ಶರ್ಮಾ ಅವರ ಮಗ ರಜತ್ ಶರ್ಮಾ ಹಾಗೂ ಅವರ ಕುಟುಂಬಸ್ಥರೇ ಕಾರಣ ಎಂದು ನೇರವಾಗಿ ಆರೋಪಿಸಿದ್ದಾರೆ. “ಮದುವೆಯಾಗುವ ಭರವಸೆ ನೀಡಿ ದೀರ್ಘಕಾಲ ದೈಹಿಕ ಸಂಬಂಧ ಬೆಳಸಿದ ರಜತ್, ಈಗ ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಬೆದರಿಸುತ್ತಿದ್ದಾರೆ,” ಎಂದು ಯುವತಿಯು ಪತ್ರದಲ್ಲಿ ಅಳಲು ತೋಡಿಕೊಂಡಿದ್ದಾರೆ.
ಈ ಪ್ರಕರಣವು ಕೇವಲ ಇತ್ತೀಚಿನದಲ್ಲ, ಕಳೆದ ಏಪ್ರಿಲ್ ತಿಂಗಳಲ್ಲಿಯೇ ಯುವತಿ ಆರೋಪಿ ರಜತ್ ಶರ್ಮಾ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದರು. ಏಪ್ರಿಲ್ 30ರಂದು ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಐಪಿಸಿ 376 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಆದರೆ, ಆರೋಪಿ ಪ್ರಭಾವಿ ರಾಜಕೀಯ ಹಿನ್ನಲೆಯುಳ್ಳವರಾಗಿದ್ದರಿಂದ, ಪೊಲೀಸರು ಕ್ರಮ ಕೈಗೊಳ್ಳಲು ವಿಳಂಬ ಮಾಡಿದರು ಮತ್ತು ಆರೋಪಿಗೆ ಕೆಲವೇ ದಿನಗಳಲ್ಲಿ ಜಾಮೀನು ಲಭಿಸಿತು ಎಂದು ಸಂತ್ರಸ್ತೆಯ ಕುಟುಂಬಸ್ಥರು ದೂರಿಸಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | SIR – ಬಿಜೆಪಿಗಾಗಿ ಚುನಾವಣಾ ಆಯೋಗ ನಡೆಸುತ್ತಿರುವ ರಕ್ತರಹಿತ ನರಮೇಧ
ಜಾಮೀನಿನ ಮೇಲೆ ಹೊರಬಂದ ನಂತರವೂ ಆರೋಪಿ ರಜತ್ ಮತ್ತು ಆತನ ಕುಟುಂಬಸ್ಥರು ಪ್ರಕರಣ ಹಿಂಪಡೆಯುವಂತೆ ಯುವತಿಗೆ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ. “ನನ್ನ ದೂರು ದಾಖಲಿಸಿಕೊಳ್ಳಲು ಪೊಲೀಸರು ಗಂಟೆಗಟ್ಟಲೆ ಕಾಯಿಸಿದ್ದರು. ಪ್ರಭಾವಿಗಳಾದ್ದರಿಂದ ನಮಗೆ ನ್ಯಾಯ ಸಿಗುವ ಭರವಸೆ ಇರಲಿಲ್ಲ. ಈಗ ನನ್ನ ಮಾನಹಾನಿ ಮಾಡಿ ಬದುಕಲು ಬಿಡುತ್ತಿಲ್ಲ” ಎಂದು ಸಂತ್ರಸ್ತೆ ತನ್ನ ಪತ್ರದಲ್ಲಿ ಉಲ್ಲೇಖಿಸಿರುವುದು ವ್ಯವಸ್ಥೆಯ ಲೋಪಕ್ಕೆ ಹಿಡಿದ ಕನ್ನಡಿಯಾಗಿದೆ.
ಮರಣ ಪತ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಮೋಹನ್ ಯಾದವ್ ಹಾಗೂ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರನ್ನು ಪ್ರಸ್ತಾಪಿಸಿರುವ ಸಂತ್ರಸ್ತೆ, ತನಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಆಡಳಿತರೂಢ ಬಿಜೆಪಿಯ ಪ್ರಮುಖ ನಾಯಕಿಯ ಮಗನೇ ಈ ಕೃತ್ಯದಲ್ಲಿ ಭಾಗಿಯಾಗಿರುವುದರಿಂದ ಸಹಜವಾಗಿಯೇ ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣವನ್ನು ಮುಚ್ಚಿಹಾಕಲು ರಾಜಕೀಯ ಒತ್ತಡ ಹೇರಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಸದ್ಯ ಪೊಲೀಸರು ಸಂತ್ರಸ್ತೆಯ ಮರಣ ಪತ್ರವನ್ನು ಸಾಕ್ಷ್ಯವಾಗಿ ಪರಿಗಣಿಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಸಂತ್ರಸ್ತೆಗೆ ಪ್ರಜ್ಞೆ ಬಂದು ಮರಳಿ ಹೇಳಿಕೆ ನೀಡಿದ ನಂತರವಷ್ಟೇ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಆರೋಪಿ ರಜತ್ ಶರ್ಮಾ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ.
ಈ ಘಟನೆಯು ಮಧ್ಯಪ್ರದೇಶದಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಭಾವಿ ರಾಜಕಾರಣಿಗಳ ಮಕ್ಕಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಸಂತ್ರಸ್ತೆಯ ಕುಟುಂಬ ಆಸ್ಪತ್ರೆಯ ಹೊರಗೆ ಆಕ್ರಂದನ ಮುಂದುವರಿಸಿದ್ದು, ಆರೋಪಿಯನ್ನು ತಕ್ಷಣ ಬಂಧಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.





