ಮುಸ್ಲಿಂ ವಿದ್ಯಾರ್ಥಿಯ ಕಪಾಳಕ್ಕೆ ಹೊಡೆದಿದ್ದ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, “ಆ ಮುಸ್ಲಿಂ ಬಾಲಕನ ಶಾಲಾ ಶಿಕ್ಷಣ ಮುಗಿಯುವವರೆಗೂ ಆತನ ಶೈಕ್ಷಣಿಕ ವೆಚ್ಚವನ್ನು ಸರ್ಕಾರವೇ ಭರಿಸಬೇಕು” ಎಂದು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ತಾಕೀತು ಮಾಡಿದೆ.
2023ರ ಆಗಸ್ಟ್ನಲ್ಲಿ ಉತ್ತರ ಪ್ರದೇಶದ ಮುಜಫರ್ ನಗರದ ಶಾಲೆಯೊಂದರಲ್ಲಿ ಏಳು ವರ್ಷದ (2ನೇ ತರಗತಿ) ಮುಸ್ಲಿಂ ವಿದ್ಯಾರ್ಥಿಯ ಕಪಾಳಕ್ಕೆ ಹೊಡೆಯುವಂತೆ ತರಗತಿಯ ಇತರ ವಿದ್ಯಾರ್ಥಿಗಳಿಗೆ ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರು ಸೂಚಿಸಿದ್ದರು. ಬಾಲಕನ ಸಹಪಾಠಿಗಳು ಆತನ ಕೆನ್ನೆಗೆ ಹೊಡೆದಿದ್ದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಳಿಕ, ಶಿಕ್ಷಕಿ ವಿರುದ್ಧ ಪ್ರಕರಣವೂ ದಾಖಲಾಗಿತ್ತು.
ಪ್ರಕರಣವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣವನ್ನು ಉಲ್ಲೇಖಿಸಿ ಸಾಮಾಜಿಕ ಕಾರ್ಯಕರ್ತ ತುಷಾರ್ ಗಾಂಧಿ ಅವರು 2009ರ ಶಿಕ್ಷಣ ಕಾಯ್ದೆ ಜಾರಿಗೆ ಸಂಬಂಧವಾಗಿ ಪಿಐಎಲ್ಅನ್ನೂ ಸಲ್ಲಿಸಿದ್ದರು. ಪ್ರಕರಣ ಮತ್ತು ಪಿಐಎಲ್ಅನ್ನು ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರಿದ್ದ ಪೀಠವು, “ಸಂತ್ರಸ್ತ ವಿದ್ಯಾರ್ಥಿಯ ಶಾಲಾ ಶಿಕ್ಷಣ ಮುಗಿಯುವವರೆಗೆ ಆತನ ಬೋಧನಾ ಶುಲ್ಕ, ಸಮವಸ್ತ್ರ, ಪುಸ್ತಕಗಳು ಹಾಗೂ ಸಾರಿಗೆ ಶುಲ್ಕ ಸೇರಿದಂತೆ ಎಲ್ಲ ರೀತಿಯ ಶೈಕ್ಷಣಿಕ ವೆಚ್ಚವನ್ನು ರಾಜ್ಯ ಸರ್ಕಾರವೇ ಪಾವತಿಸಬೇಕು. ಇದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ” ಎಂದು ನಿರ್ದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಶದನ್ ಫರಾಸತ್, “ಬಾಲಕನ ಕೊನೆಯ ಸೆಮಿಸ್ಟರ್ನ ಬೋಧನಾ ಶುಲ್ಕವನ್ನು ಸರ್ಕಾರ ಪಾವತಿಸಿಲ್ಲ. ಸಮವಸ್ತ್ರದ ವೆಚ್ಚಗಳು ಇನ್ನೂ ಬಾಕಿ ಉಳಿದಿವೆ” ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು.
“ಬಾಲಕನ ಪೋಷಕರು ಕೃಷಿಕರಾಗಿದ್ದು, ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಘಟನೆಯ ಬಳಿಕ ಕುಟುಂಬವು ನಿರಂತರವಾಗಿ ಅವಮಾನ ಎದುರಿಸುತ್ತಿದೆ. ಇದನ್ನು ಪರಿಗಣಿಸಿ ರಾಜ್ಯ ಸರ್ಕಾರವು ಮಗುವಿನ ಶೈಕ್ಷಣಿಕ ವೆಚ್ಚವನ್ನು ಭರಿಸುವಂತೆ ಆದೇಶಿಸಬೇಕು” ಎಂದು ಮನವಿ ಮಾಡಿದ್ದರು.




