2022ರಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರ ಬಗ್ಗೆ ಹೇಳಿಕೆ ನೀಡಿದ ಕಾರಣಕ್ಕೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್ನ ಕ್ರಿಮಿನಲ್ ನ್ಯಾಯಾಲಯವು ರದ್ದುಗೊಳಿಸಿದೆ.
2022ರ ಜೂನ್ 15, 16ರಂದು ಹಿಂಗೋಲಿ ಮತ್ತು ಅಕೋಲ್ನಲ್ಲಿ ನಡೆದ ಮೆರವಣಿಗೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಸಾವರ್ಕರ್ ಬಗ್ಗೆ ಅವಮಾನಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಾಸಿಕ್ ಮೂಲದ ನಿರ್ಭಯಾ ಫೌಂಡೇಶನ್ನ ಅಧ್ಯಕ್ಷ ದೇವೇಂದ್ರ ಭೂತಾಡ ಅವರು ದೂರು ದಾಖಲಿಸಿದ್ದರು.
ಇದನ್ನು ಓದಿದ್ದೀರಾ? ಸಾವರ್ಕರ್ ಹೆಸರಿನ ದುರ್ಬಳಕೆ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಭೂತಾಡ ದೂರಿನ ಆಧಾರದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 (ಮಾನನಷ್ಟ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ನಾಸಿಕ್ ನ್ಯಾಯಾಲಯವು 2024ರ ಸೆಪ್ಟೆಂಬರ್ನಲ್ಲಿ ಗಾಂಧಿಯವರಿಗೆ ಸಮನ್ಸ್ ಜಾರಿ ಮಾಡಿತ್ತು.
ಅದಾದ ಬಳಿಕ ರಾಹುಲ್ ಅವರಿಗೆ ಜಾಮೀನು ನೀಡಲಾಗಿದೆ. ವರ್ಚುವಲ್ ಆಗಿ ಆನ್ಲೈನ್ ಮೂಲಕ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಲಾಗಿತ್ತು. ಈ ವೇಳೆ ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ರಾಹುಲ್ ವಾದಿಸಿದ್ದಾರೆ. ಅದಾದ ಬಳಿಕ 2024ರ ಸೆಪ್ಟೆಂಬರ್ನಲ್ಲೇ ಕೋರ್ಟ್ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 202ರ ಅಡಿಯಲ್ಲಿ ತನಿಖೆಗೆ ಆದೇಶಿಸಿತ್ತು.
ಪೊಲೀಸರು ವರದಿ ಸಲ್ಲಿಸಿದ ಬಳಿಕ ದೂರುದಾರರು ಪ್ರಕರಣವನ್ನು ಹಿಂಪಡೆಯಲು ಮುಂದಾಗಿದ್ದು ಈ ಹಿನ್ನೆಲೆ ನ್ಯಾಯಾಧೀಶರು ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ರದ್ದುಗೊಳಿಸಿದ್ದಾರೆ.





