ಗಮನಾರ್ಹ ಬೆಳವಣಿಗೆಯಲ್ಲಿ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಇತರ ಪರೀಕ್ಷೆಯ ಅಕ್ರಮಗಳ ಕುರಿತು ಸಿಬಿಐ ತನಿಖೆಗೊಳಪಡಿಸಲು ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ಎನ್ಟಿಎ ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಹಿತೆನ್ ಸಿಂಗ್ ಕಶ್ಯಪ್ ಅವರ ಅರ್ಜಿಯ ವಿಚಾರಣೆ ನಡೆಸಿದ ರಜಾ ಪೀಠದ ನ್ಯಾಯಾಧೀಶರಾದ ವಿಕ್ರಮ್ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರು ಕೇಂದ್ರೀಯ ತನಿಖಾ ದಳ(ಸಿಬಿಐ) ಹಾಗೂ ಬಿಹಾರ್ ಸರ್ಕಾರಕ್ಕೂ ಕೂಡ ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿದೆ.
ಇತರ ಉಳಿಕೆ ಪ್ರಕರಣದೊಂದಿಗೆ ಪಿಐಎಲ್ ವಿಚಾರಣೆಯನ್ನು ಬೇಸಿಗೆ ರಜೆ ಮುಗಿದ ನಂತರ ಜುಲೈ 8ರಂದು ಕಾರ್ಯಾರಂಭಿಸುವುದಾಗಿ ಪೀಠ ತಿಳಿಸಿತು.
ಕೇಂದ್ರ ಸರ್ಕಾರ ಹಾಗೂ ಎನ್ಟಿಎ ಗುರುವಾರದಂದು 1563 ಅಭ್ಯರ್ಥಿಗಳಿಗೆ ನೀಡಿದ್ದ ಕೃಪಾಂಕವನ್ನು ರದ್ದುಗೊಳಿಸಿರುವುದಾಗಿ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?
ಕೃಪಾಂಕ ರದ್ದುಪಡಿಸಲಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ತೆಗೆದುಕೊಳ್ಳುವ ಆಯ್ಕೆ ನೀಡಲಾಗಿದ್ದು, ಅವರಿಗೆ ಕೌನ್ಸಲಿಂಗ್ನಲ್ಲೂ ಪರಿಹಾರಾತ್ಮಕ ಅಂಕಗಳನ್ನು ಪರಿಗಣಿಸುವುದಿಲ್ಲ ಎಂದು ತಿಳಿಸಲಾಗಿತ್ತು.
1536 ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕಗಳನ್ನು ನೀಡಿ ರ್ಯಾಂಕ್ ಬರಲು ಕಾರಣವಾದ ಎನ್ಟಿಎ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೇ 5 ರಂದು ಹಮ್ಮಿಕೊಳ್ಳಲಾಗಿದ್ದ ನೀಟ್ ಪರೀಕ್ಷೆಯಲ್ಲಿ ದೇಶಾದ್ಯಂತ 571 ಕೇಂದ್ರಗಳಲ್ಲಿ 24 ಲಕ್ಷಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಎನ್ಟಿಎ ಇತಿಹಾಸದಲ್ಲಿಯೆ ಮೊದಲ ಬಾರಿಗೆ 67ಕ್ಕೂ ಹೆಚ್ಚು ವಿದ್ಯಾರ್ಥಿಗಳು 720 ಕ್ಕೆ 720 ಅಂಕ ಪಡೆದುಕೊಂಡಿದ್ದರು. ಈ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಹರಿಯಾಣದ ಫರಿದಾಬಾದ್ ಪರೀಕ್ಷಾ ಕೇಂದ್ರದಲ್ಲಿ ಬರೆದ ವಿದ್ಯಾರ್ಥಿಗಳಾಗಿದ್ದರು.
ಪ್ರಶ್ನೆಪತ್ರಿಕೆ ಸೋರಿಕೆ, ಇತರೆ ಆರೋಪಿಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಎನ್ಟಿಎಗೆ ನಿರ್ದೇಶಿಸಿದೆ. ಇದಲ್ಲದೆ 10 ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 8 ರಂದು ಪರಿಗಣಿಸುವುದಾಗಿ ತಿಳಿಸಿದೆ.





