ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ರಾಜಕೀಯ ಸಮರಕ್ಕೆ ಸಾಕ್ಷಿಯಾಗಿದೆ. ಸರ್ಕಾರದ ಸಂಸದೀಯ ನಡೆಗಳ ಬಗ್ಗೆ ವಿರೋಧ ಪಕ್ಷಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಾಂವಿಧಾನಿಕ ಪ್ರಕ್ರಿಯೆಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿವೆ.
ವಿರೋಧ ಪಕ್ಷಗಳ ಈ ನಡೆಯು ಸಂಸತ್ತಿನ ಘನತೆಯನ್ನು ಕಾಪಾಡುವ ಉದ್ದೇಶವನ್ನು ಹೊಂದಿದೆಯೇ ಹೊರತು, ಸ್ಪೀಕರ್ ಓಂ ಬಿರ್ಲಾ ಅವರನ್ನು ವೈಯಕ್ತಿಕವಾಗಿ ಗುರಿಯಾಗಿಸಲು ಅಲ್ಲ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಸ್ಪಷ್ಟಪಡಿಸಿದ್ದಾರೆ.
ಮುಂದೆ ಓದಿದ್ದೀರಾ? ಮೊಜ್ತಬಾ ಖಮೇನಿ | ತೆರೆಯ ಹಿಂದಿದ್ದ ‘ಗೇಟ್ಕೀಪರ್’ ಈಗ ಇರಾನ್ನ ಪರಮೋಚ್ಚ ನಾಯಕ
ಅವಿಶ್ವಾಸ ನಿರ್ಣಯದ ಚರ್ಚೆಯ ವೇಳೆ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ಅವರು ಸಭಾಧ್ಯಕ್ಷರ ಪೀಠದಲ್ಲಿ ಕುಳಿತಿರುವುದರ ಸಾಂವಿಧಾನಿಕ ಆಧಾರವನ್ನು ಗೊಗೊಯ್ ತೀವ್ರವಾಗಿ ಪ್ರಶ್ನಿಸಿದರು. “ಪಾಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ ನಿರ್ಧಾರವನ್ನು ಹೇಗೆ ಮತ್ತು ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಯಿತು ಎಂಬುದಕ್ಕೆ ಸರ್ಕಾರದ ಬಳಿ ಯಾವುದೇ ಸ್ಪಷ್ಟ ವಿವರಣೆ ಇಲ್ಲ. ಇಂತಹ ನಿರ್ಣಯದ ಸಂದರ್ಭದಲ್ಲಿ ಸ್ಪೀಕರ್ ಖುದ್ದು ಅಧ್ಯಕ್ಷತೆ ವಹಿಸಲು ಸಾಧ್ಯವಾಗದಿದ್ದಾಗ, ಪೀಠಕ್ಕೆ ಬೇರೊಬ್ಬರನ್ನು ನೇಮಿಸುವ ಅಧಿಕಾರದ ಬಗ್ಗೆಯೂ ಕೂಲಂಕಷವಾಗಿ ಪರಿಶೀಲನೆ ನಡೆಸಬೇಕಿದೆ” ಎಂದು ಅವರು ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದರು. ಆ ಮೂಲಕ ಸರ್ಕಾರದ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆಯ ಕೊರತೆಯಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸಂಸದನ ಈ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಚುನಾವಣೆಗಳ ಸಂದರ್ಭದಲ್ಲಿ ಅಥವಾ ಸದನ ವಿಸರ್ಜನೆಯಾದ ಬಳಿಕವೂ ಸ್ಪೀಕರ್ ಅವರ ಸಾಂಸ್ಥಿಕ ಅಧಿಕಾರವು ಮುಂದುವರಿಯುತ್ತದೆ” ಎಂದು ಸರ್ಕಾರದ ಹಾಗೂ ಸ್ಪೀಕರ್ ನಡೆಯನ್ನು ಸಮರ್ಥಿಸಿಕೊಂಡರು.





