ದೆಹಲಿಯಲ್ಲಿ 2020ರ ಫೆಬ್ರವರಿಯಲ್ಲಿ ನಡೆದ ಹಿಂಸಾಚಾರಕ್ಕೂ ನನಗೂ ಸಂಬಂಧವಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ವಿದ್ಯಾರ್ಥಿ ನಾಯಕ, ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಶುಕ್ರವಾರ ಸುಪ್ರೀಂ ಕೋರ್ಟ್ ಮುಂದೆ ತಮ್ಮ ವಕೀಲರ ಮುಖಾಂತರ ವಾದಿಸಿದ್ದಾರೆ.
ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನದಲ್ಲಿರುವ ವಿದ್ಯಾರ್ಥಿ ನಾಯಕರಾದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಖಾಲಿದ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಹಾಜರಾಗಿದ್ದರು. “ಖಾಲಿದ್ ಅವರ ಬಳಿಯಿಂದ ದೆಹಲಿ ಗಲಭೆಗೆ ಸಂಬಂಧಿಸಿದ ಯಾವುದೇ ನಿಧಿ, ಶಸ್ತ್ರಾಸ್ತ್ರಗಳು ಅಥವಾ ಯಾವುದೇ ವಸ್ತು ಪುರಾವೆಗಳು ತನಿಖಾ ತಂಡಕ್ಕೆ ಲಭ್ಯವಾಗಿಲ್ಲ” ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಉಮರ್-ಶಾರ್ಜೀಲ್ ಜಾಮೀನು ಅರ್ಜಿ ವಿಚಾರಣೆ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ತರಾಟೆ
“ಒಟ್ಟು 751 ಎಫ್ಐಆರ್ಗಳಿವೆ. ಇದರಲ್ಲಿ ನನ್ನ ಮೇಲೆ ಆರೋಪ ಹೊರಿಸಲಾಗಿದೆ. ಆದರೆ ಇದು ಪಿತೂರಿ. ನಾನು (ಉಮರ್ ಖಾಲಿದ್) ಗಲಭೆ ನಡೆದ ದಿನ ದೆಹಲಿಯಲ್ಲಿಯೇ ಇರಲಿಲ್ಲ. ಹಿಂಸಾಚಾರಕ್ಕೆ ನನ್ನ ಸಂಬಂಧವಿದೆ ಎಂಬುದಕ್ಕೆ ಯಾವುದೇ ಭೌತಿಕ ಪುರಾವೆಗಳು ಇನ್ನೂ ಲಭ್ಯವಾಗಿಲ್ಲ. ಯಾವುದೇ ಸಾಕ್ಷಿ ಹೇಳಿಕೆಯೂ ಇಲ್ಲ” ಎಂದು ಉಮರ್ ಖಾಲಿದ್ ಪರ ವಕೀಲರು ವಾದಿಸಿದರು.
“ಖಾಲಿದ್ ಸಮಾನತೆಯ ಆಧಾರದ ಮೇಲೆ ಜಾಮೀನು ಪಡೆಯಲು ಅರ್ಹರು. ಈಗಾಗಲೇ 2021ರ ಜೂನ್ ತಿಂಗಳಲ್ಲಿ ಸಾಮಾಜಿಕ ಕಾರ್ಯಕರ್ತರಾದ ನತಾಶಾ ನರ್ವಾಲ್, ದೇವಾಂಗನಾ ಕಲಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ಜಾಮೀನು ನೀಡಲಾಗಿದೆ. 2020ರ ಫೆಬ್ರವರಿ 17ರಂದು ಅಮರಾವತಿಯಲ್ಲಿ ಉಮರ್ ಖಾಲಿದ್ ಮಾಡಿದ ಭಾಷಣ ಪ್ರಚೋದನಕಾರಿ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಇದು ಇಂದಿಗೂ ಯೂಟ್ಯೂಬ್ನಲ್ಲಿ ಲಭ್ಯವಿದೆ. ನಾನು (ಖಾಲಿದ್) ಗಾಂಧಿ ತತ್ವಗಳ ಬಗ್ಗೆ ಮಾತನಾಡಿದ ಸಾರ್ವಜನಿಕ ಭಾಷಣ ಅದು” ಸಿಬಲ್ ಹೇಳಿದರು.
ಇನ್ನು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನವೆಂಬರ್ 3ಕ್ಕೆ ಮುಂದೂಡಿಕೆ ಮಾಡಿದೆ. ಈ ಹಿಂದೆ ಅಕ್ಟೋಬರ್ 27ರಂದು ವಿಚಾರಣೆಯನ್ನು ಅ.31ಕ್ಕೆ ಮುಂದೂಡಿಕೆ ಮಾಡಿತ್ತು.
ಇದನ್ನು ಓದಿದ್ದೀರಾ? ಸೋಮವಾರ ಸುಪ್ರೀಂ ಕೋರ್ಟ್ನಿಂದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ
2022ರ ಆರಂಭದಲ್ಲಿ ಬಂಧಿತರಾಗಿರುವ ಈ ನಾಯಕರುಗಳು ಹಲವು ಬಾರಿ ದೆಹಲಿ ಹೈಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆದರೆ ಪ್ರತಿ ಬಾರಿಯೂ ಅರ್ಜಿ ತಿರಸ್ಕೃತಗೊಂಡಿದೆ. ಸೆಪ್ಟೆಂಬರ್ 2ರಂದು ದೆಹಲಿ ಹೈಕೋರ್ಟ್ ಅರ್ಜಿ ತಿರಸ್ಕರಿಸುವುದನ್ನು ಪ್ರಶ್ನಿಸಿ ವಿದ್ಯಾರ್ಥಿ ನಾಯಕರುಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು 53 ಜನರು ಸಾವನ್ನಪ್ಪಿದ್ದಾರೆ. 700ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಆ ಗಲಭೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪದಲ್ಲಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್ ಸೇರಿದಂತೆ 18 ಮಂದಿಯನ್ನು 2020ರ ಸೆಪ್ಟೆಂಬರ್ನಲ್ಲಿ ದೆಹಲಿ ಪೊಲೀಸರು ಬಂಧಿಸಿದರು. ಧಾರ್ಮಿಕ ಭಾವನೆ ಕದಡಿದ್ದಾರೆ ಎಂಬ ಆರೋಪ ಹೊರಿಸಿ, ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ’ (ಯುಎಪಿಎ) ಅಡಿ ಪ್ರಕರಣವನ್ನೂ ದಾಖಲಿಸಿದರು. ಆದರೆ ಈವರೆಗೂ ಬಿಡುಗಡೆ ಮಾಡಲಾಗಿಲ್ಲ. ಜತೆಗೆ ಸಂಪೂರ್ಣ ಚಾರ್ಜ್ಶೀಟ್ ಕೂಡಾ ಸಲ್ಲಿಸಿಲ್ಲ.





