ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ (ಡಿ.1) ಆರಂಭವಾಗಲಿದ್ದು, ಡಿ.19ರವರೆಗೂ ಅಧಿವೇಶನ ನಡೆಯಲಿದೆ. ಆಡಳಿತಾರೂಢ ಎನ್ಡಿಎ ಕೆಲ ಮಸೂದೆಗಳನ್ನು ಮಂಡಿಸಲು ಸಿದ್ಧತೆ ನಡೆಸಿದ್ದರೆ, ವಿರೋಧ ಪಕ್ಷಗಳು ಮತದಾರರಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್ಐಆರ್), ದೆಹಲಿ ಕಾರು ಬಾಂಬ್ ಸ್ಫೋಟ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಪಟ್ಟು ಹಿಡಿದಿವೆ.
ಅಧಿವೇಶನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆಗಳಿವೆ. ವಿರೋಧ ಪಕ್ಷಗಳ ಆಗ್ರಹಕ್ಕೆ ಮಣಿಯದೆ, ನಿಯಮದ ಪ್ರಕಾರ ಚರ್ಚೆಗೆ ಅವಕಾಶ ಕಲ್ಪಿಸಲು ಸರ್ಕಾರ ಬಯಸಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಭಾನುವಾರ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ, ಸಮಾಜವಾದಿ ಪಕ್ಷ, ಸಿಪಿಎಂ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಎಸ್ಐಆರ್ ಕುರಿತ ಚರ್ಚೆಗೆ ಸಭೆಯಲ್ಲಿ ಆಗ್ರಹಿಸಿದರು.
“ವಿವಾದಿತ ಎಸ್ಐಆರ್ ಕುರಿತು ಚರ್ಚೆಗೆ ಅವಕಾಶ ನೀಡದಿದ್ದರೆ, ಕಲಾಪಕ್ಕೆ ಅಡ್ಡಿಪಡಿಸಬೇಕಾಗುತ್ತದೆ. ಅದರ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ’ ಎಂದು ಪ್ರತಿಪಕ್ಷಗಳು ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿವೆ.
ದೆಹಲಿ ಕಾರು ಸ್ಫೋಟದ ಘಟನೆಯನ್ನು ಮುಂದಿಟ್ಟುಕೊಂಡು ರಾಷ್ಟ್ರೀಯ ಭದ್ರತೆ ಕುರಿತು ಚರ್ಚಿಸಲು ವಿರೋಧ ಪಕ್ಷಗಳು ಉತ್ಸುಕವಾಗಿವೆ. ಅಲ್ಲದೆ, ಕಾರ್ಮಿಕ ಸಂಹಿತೆಗಳ ಜಾರಿ, ರಾಜ್ಯ ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳ ವಿಷಯದಲ್ಲಿ ರಾಜ್ಯಪಾಲರ ಪಾತ್ರ, ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ ಅನುದಾನ ಬಿಡುಗಡೆಯಲ್ಲಿನ ಬಾಕಿ, ಮತಕಳವು ಆರೋಪ ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ನಿರ್ಧರಿಸಿವೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಕೊಟ್ಟ ಮಾತು’ ಗದ್ದಲ ಸೃಷ್ಟಿಸಿದ ಬಳಿಕ ಎಚ್ಚೆತ್ತ ಕಾಂಗ್ರೆಸ್
‘ರಾಷ್ಟ್ರೀಯ ಭದ್ರತೆ, ಚುನಾವಣಾ ಪ್ರಕ್ರಿಯೆಯ ಭದ್ರತೆ ಮತ್ತು ಆರ್ಥಿಕ ಭದ್ರತೆ ಸೇರಿದಂತೆ ಇತರ ವಿಷಯಗಳ ಕುರಿತು ಚರ್ಚೆ ಆಗಬೇಕು. ಮುಖ್ಯವಾಗಿ ಪ್ರಜಾಪ್ರಭುತ್ವದ ಭದ್ರತೆ ಕುರಿತು ಚರ್ಚೆಯಾಗಬೇಕು. ಚುನಾವಣಾ ಆಯೋಗ ಪಕ್ಷಪಾತಿಯಾಗಿ ವರ್ತಿಸುತ್ತಿದ್ದು, ಮತದಾರರ ಪಟ್ಟಿಯ ಶುದ್ಧತೆಯ ಬಗ್ಗೆ ಸಮಗ್ರ ಚರ್ಚೆ ನಡೆಯಬೇಕು. ವಿದೇಶಾಂಗ ನೀತಿ, ಬೆಳೆಗಳಿಗೆ ಸೂಕ್ತ ಬೆಲೆ, ರೈತರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು’ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಉಪ ನಾಯಕ ಗೌರವ್ ಗೊಗೊಯ್ ಒತ್ತಾಯಿಸಿದರು.
‘ಎಸ್ಐಆರ್ ಪ್ರಕ್ರಿಯೆಯಲ್ಲಿ ಹಲವು ತಪ್ಪುಗಳಾಗಿವೆ. ಇದರ ಚರ್ಚೆಯಿಂದ ಸರ್ಕಾರ ಹಿಂದೆ ಸರಿಯುವಂತಿಲ್ಲ. ಉಳಿದ ವಿಷಯಗಳಿಗಿಂತ ಮೊದಲಿಗೆ ಎಸ್ಐಆರ್ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ ಸಂಸತ್ತು ಸುಗಮವಾಗಿ ಕಾರ್ಯನಿರ್ವಹಿಸಲು ಬಿಡುವುದಿಲ್ಲ ಎಂಬುದಾಗಿ ಸಭೆಯಲ್ಲಿ ಎಚ್ಚರಿಸಿದ್ದೇವೆ’ ಎಂದು ಸಮಾಜವಾದಿ ಪಕ್ಷದ ನಾಯಕ ರಾಮಗೋಪಾಲ್ ಯಾದವ್ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
‘ಎಸ್ಐಆರ್, ದೆಹಲಿ ಕಾರ್ ಬಾಂಬ್ ಸ್ಫೋಟ, ದೆಹಲಿ ವಾಯು ಮಾಲಿನ್ಯ ಕುರಿತು ಚರ್ಚೆಗೆ ಅವಕಾಶ ನೀಡಬೇಕು’ ಎಂದು ಸಿಪಿಐ ನಾಯಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಎರಡು ಗಂಟೆಗಳವರೆಗೆ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ 36 ಪಕ್ಷಗಳ 50 ನಾಯಕರು ಭಾಗವಹಿಸಿದ್ದರು.ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆಪಿ.ನಡ್ಡಾ, ಸಚಿವರಾದ ಕಿರಣ್ ರಿಜಿಜು, ಅರ್ಜುನ್ ರಾಮ್ ಮೇಘವಾಲ್, ಎಲ್. ಮುರುಗನ್ ಸಭೆಯಲ್ಲಿದ್ದರು.





