ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಗುಂಡಿನ ದಾಳಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರೂ ಜತೆಗಿದ್ದು ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ದಾಳಿಯನ್ನು ಹಲವು ನಾಯಕರುಗಳು ಖಂಡಿಸಿದ್ದು, Z+ ಭದ್ರತಾ ರಕ್ಷಣೆ ಹೊಂದಿರುವ ಮಾಜಿ ಸಿಎಂ ಬಳಿ ದಾಳಿಕೋರರು ಬರಲು ಸಾಧ್ಯವಾಗಿದ್ದು ಹೇಗೆ ಎಂದು ವಿಪಕ್ಷಗಳು ಪ್ರಶ್ನಿಸಿದೆ. ಹಾಗೆಯೇ ಸಮಗ್ರ ತನಿಖೆ ನಡೆಸಬೇಕೆಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕರು ಒತ್ತಾಯಿಸಿದ್ದಾರೆ.
ಇದನ್ನು ಓದಿದ್ದೀರಾ? ಒಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಂದಿನ ಸಿಎಂ: ಫಾರೂಕ್ ಅಬ್ದುಲ್ಲಾ ಘೋಷಣೆ
ಜಮ್ಮುವಿನ ಹೊರವಲಯದ ‘ಗ್ರೇಟರ್ ಕೈಲಾಶ್’ ಪ್ರದೇಶದಲ್ಲಿ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ದಾಳಿ ನಡೆದಿದೆ.
ಸರ್ಕಾರವು ಅಬ್ದುಲ್ಲಾ ಅವರ ಭದ್ರತಾ ವ್ಯಾಪ್ತಿಯನ್ನು ಹೆಚ್ಚಿಸಬೇಕು. ಭದ್ರತಾ ಪ್ರೋಟೋಕಾಲ್ಗಳ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಒತ್ತಾಯ ವ್ಯಕ್ತವಾಗಿದೆ. ಕೇಂದ್ರ ರಕ್ಷಣಾ ಪಟ್ಟಿಯಡಿಯಲ್ಲಿ, ವಿಐಪಿ ಭದ್ರತಾ ವ್ಯಾಪ್ತಿ ಅತ್ಯುನ್ನತ ಮಟ್ಟದ Z-ಪ್ಲಸ್ (ASL) ನಿಂದ Z-ಪ್ಲಸ್ ವರೆಗೆ ಪ್ರಾರಂಭವಾಗುತ್ತದೆ, ನಂತರ Z, Y, Y-ಪ್ಲಸ್ ಮತ್ತು X ವರೆಗೆ ಇರುತ್ತದೆ.
ಜಮ್ಮುವಿನ ಪುರಾಣಿ ಮಂಡಿಯ ನಿವಾಸಿ 63 ವರ್ಷದ ಕಮಲ್ ಸಿಂಗ್ ಜಮ್ವಾಲ್ ಎಂದು ಗುರುತಿಸಲಾದ ಆರೋಪಿಯನ್ನು ಸದ್ಯ ಬಂಧಿಸಲಾಗಿದೆ. ಕಳೆದ 20 ವರ್ಷಗಳಿಂದ ಅಬ್ದುಲ್ಲಾ ಅವರನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ.
ದಾಳಿಯನ್ನು ತೀವ್ರವಾಗಿ ಖಂಡಿಸಿದ ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್, “ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿಯನ್ನು ಹೊಂದಿರುವವರನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂದು ಹೇಳಿದೆ. ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಈ ಘಟನೆಯನ್ನು ಆಘಾತಕಾರಿ ಎಂದು ಹೇಳಿದ್ದಾರೆ.
“ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮತ್ತು ಇತರ ಹಿರಿಯ ನಾಯಕರ ಮೇಲಿನ ಗುಂಡಿನ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ. ಇಂತಹ ಹಿಂಸಾಚಾರಗಳು ಪ್ರದೇಶದಲ್ಲಿನ ಪ್ರಸ್ತುತ ಭದ್ರತಾ ಸನ್ನಿವೇಶದ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕುತ್ತವೆ” ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುಲಾಮ್ ಅಹ್ಮದ್ ಮಿರ್ ಕೂಡಾ ಈ ಘಟನೆಯನ್ನು ಖಂಡಿಸಿದ್ದಾರೆ. “ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಘಟನೆಗಳು ದುರದೃಷ್ಟಕರ. ಇದು ಹೇಗೆ ಸಂಭವಿಸಿತು ಎಂಬುದರ ಬಗ್ಗೆ ತನಿಖೆಯಾಗಬೇಕು” ಎಂದಿದ್ದಾರೆ.
ಇನ್ನು ಬಿಜೆಪಿ “ಹಿಂಸಾಚಾರದ ಮೂಲಕ ರಾಜಕೀಯ ನಾಯಕರನ್ನು ಗುರಿಯಾಗಿಸುವುದು ಸ್ವೀಕಾರಾರ್ಹವಲ್ಲ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಯಬೇಕು” ಎಂದು ಆಗ್ರಹಿಸಿದೆ. ಬಿಜೆಪಿ ನಾಯಕ ವಕೀಲ ಸುನಿಲ್ ಸೇಥಿ ಬಿಜೆಪಿ ವಕ್ತಾರರ ಸಭೆಯಲ್ಲಿ ಮಾತನಾಡಿ, “ಪ್ರಜಾಪ್ರಭುತ್ವ ಸಮಾಜದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಸಂವಾದ ಮತ್ತು ಸಾಂವಿಧಾನಿಕ ವಿಧಾನಗಳ ಮೂಲಕ ಪರಿಹರಿಸಬೇಕು” ಎಂದು ಹೇಳಿದ್ದಾರೆ.
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೂಡ ಕಳವಳ ವ್ಯಕ್ತಪಡಿಸಿದ್ದು, ಈ ಕೃತ್ಯ ಖಂಡನಾರ್ಹ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.





