ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮುನ್ನವೇ ಅಂದರೆ 1980ರ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಂಡಿತ್ತು ಎಂಬ ಆರೋಪದಡಿ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ದೆಹಲಿ ನ್ಯಾಯಾಲಯದಲ್ಲಿ ತೀವ್ರವಾಗಿ ವಿರೋಧಿಸಿದ್ದಾರೆ. ಈ ಅರ್ಜಿಯು ಸಂಪೂರ್ಣವಾಗಿ “ರಾಜಕೀಯ ಪ್ರೇರಿತ”ವಾಗಿದ್ದು, “ಕಾನೂನು ಪ್ರಕ್ರಿಯೆಯ ದುರುಪಯೋಗ” ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಈ ಪ್ರಕರಣದ ಅರ್ಜಿದಾರರಾದ ವಿಕಾಸ್ ತ್ರಿಪಾಠಿ ಎಂಬುವರು, ಸೋನಿಯಾ ಗಾಂಧಿ ಅವರು 1983ರಲ್ಲಿ ಭಾರತದ ಪೌರತ್ವ ಪಡೆದಿದ್ದರೂ, 1980ರಲ್ಲೇ ನವದೆಹಲಿ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನಕಲಿ ದಾಖಲೆಗಳನ್ನು ನೀಡಿ ಹೆಸರು ಸೇರಿಸಿದ್ದರು ಎಂದು ಆರೋಪಿಸಿದ್ದರು. ಈ ಸಂಬಂಧ ಸೋನಿಯಾ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಆಗ್ರಹಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕಳೆದ ಸೆಪ್ಟೆಂಬರ್ 11ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ತ್ರಿಪಾಠಿ ಅವರು ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಸಲ್ಲಿಸಿದ್ದರು.
ಈ ಅರ್ಜಿಗೆ ಲಿಖಿತ ಆಕ್ಷೇಪಣೆ ಸಲ್ಲಿಸಿರುವ ಸೋನಿಯಾ ಗಾಂಧಿ, “ಪೌರತ್ವದ ವಿಷಯಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ ಮತ್ತು ಮತದಾರರ ಪಟ್ಟಿಯ ವಿವಾದಗಳು ಭಾರತೀಯ ಚುನಾವಣಾ ಆಯೋಗದ ಪರಮಾಧಿಕಾರಕ್ಕೆ ಒಳಪಡುತ್ತವೆ. ಇಂತಹ ವಿಷಯಗಳಲ್ಲಿ ಕ್ರಿಮಿನಲ್ ನ್ಯಾಯಾಲಯಗಳು ಮಧ್ಯಪ್ರವೇಶಿಸುವುದು ಸಂವಿಧಾನದ 329ನೇ ವಿಧಿಯ ಉಲ್ಲಂಘನೆಯಾಗುತ್ತದೆ ಮತ್ತು ಅಧಿಕಾರ ವಿಭಜನೆಯ ತತ್ವಕ್ಕೆ ವಿರುದ್ಧವಾಗಿದೆ,” ಎಂದು ವಾದಿಸಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಈ ಅಂಶವನ್ನು ಎತ್ತಿಹಿಡಿದು ಅರ್ಜಿ ತಿರಸ್ಕರಿಸಿದ್ದು ಸರಿಯಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜನಪ್ರತಿನಿಧಿಗಳ ಘನತೆ ಇಲ್ಲದ ಮಾತಿಗೆ ಲಗಾಮು ಬೀಳಬೇಕು
ಸುಮಾರು 43 ವರ್ಷಗಳಷ್ಟು ಹಳೆಯದಾದ ಈ ಪ್ರಕರಣದಲ್ಲಿ, ಅರ್ಜಿದಾರರು ಕೇವಲ ಊಹಾಪೋಹಗಳನ್ನು ಆಧರಿಸಿ ಆರೋಪ ಮಾಡುತ್ತಿದ್ದಾರೆಯೇ ಹೊರತು, ಸೋನಿಯಾ ಅವರು ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದರು ಎಂಬುದಕ್ಕೆ ಯಾವುದೇ ದಾಖಲೆ ಒದಗಿಸಿಲ್ಲ. ನಾಲ್ಕು ದಶಕಗಳ ನಂತರ ವಿಶ್ವಾಸಾರ್ಹ ಸಾಕ್ಷ್ಯಗಳನ್ನು ಹುಡುಕುವುದು ಅಸಾಧ್ಯವಾಗಿದ್ದು, ಇಂತಹ ಹಳೆಯ ಮತ್ತು ದುರುದ್ದೇಶಪೂರಿತ ಆರೋಪಗಳನ್ನು ವಿಚಾರಣೆಗೆ ಪರಿಗಣಿಸುವುದು ಸಂವಿಧಾನದ 21ನೇ ವಿಧಿಯ ಆಶಯಕ್ಕೆ ವಿರುದ್ಧ ಎಂದು ಸೋನಿಯಾ ಗಾಂಧಿ ಪರ ವಕೀಲರು ಪ್ರತಿಪಾದಿಸಿದ್ದಾರೆ.
ಕೆಳಹಂತದ ನ್ಯಾಯಾಲಯವು ಕೂಡ, ಅರ್ಜಿದಾರರು ಕೇವಲ ದೃಢೀಕರಿಸದ ಮತದಾರರ ಪಟ್ಟಿಯ ನಕಲು ಪ್ರತಿಯನ್ನು ಆಧರಿಸಿ ಆರೋಪ ಮಾಡುತ್ತಿದ್ದಾರೆಯೇ ವಿನಹ, ವಂಚನೆ ಅಥವಾ ನಕಲಿ ದಾಖಲೆ ಸೃಷ್ಟಿಯಂತಹ ಗಂಭೀರ ಆರೋಪಗಳಿಗೆ ತಕ್ಕ ಸಾಕ್ಷ್ಯ ಒದಗಿಸಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಚುನಾವಣಾ ಆಯೋಗದ ಅಧಿಕಾರ ವ್ಯಾಪ್ತಿಯಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತ್ತು.





