ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದ ಪ್ರಮುಖ ಆರೋಪಿ, ದರೋಡೆಕೋರನನ್ನು ಸೋಮವಾರ ಮುಂಜಾನೆ ಸುಲ್ತಾನ್ಪುರ ಮತ್ತು ಲಖಿಂಪುರ ಖೇರಿ ಪೊಲೀಸರು ಎನ್ಕೌಂಟರ್ ನಡೆಸಿ ಹತ್ಯೆಗೈದಿದ್ದಾರೆ.
ಗ್ಯಾಂಗ್ಸ್ಟರ್ ತಾಲಿಬ್ ಅಲಿಯಾಸ್ ಅಜಮ್ ಖಾನ್ ಬಗ್ಗೆ ಮಾಹಿತಿ ನೀಡಿದರೆ 1 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿತ್ತು. ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 17 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ತಾಲಿಬ್ ಮತ್ತು ಆತನ ಇಬ್ಬರು ಸಹಚರರಾದ ಸಲ್ಮಾನ್ ಮತ್ತು ಮುಖ್ತಾರ್ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | 2025ರಲ್ಲಿ 2,500ಕ್ಕೂ ಹೆಚ್ಚು ಎನ್ಕೌಂಟರ್ಗಳು
ಡಿಸೆಂಬರ್ 15ರಂದು ಬೆಳಿಗ್ಗೆ 6.30ರ ಸುಮಾರಿಗೆ ಇಬ್ಬರು ಬಾಲಕಿಯರು ತಮ್ಮ ಸೈಕಲ್ನಲ್ಲಿ ಟ್ಯೂಷನ್ಗೆ ಹೋಗುತ್ತಿದ್ದಾಗ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಸಂತ್ರಸ್ತ ಬಾಲಕಿಯರ ಪೋಷಕರು ಸಲ್ಲಿಸಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಈ ಹಿಂದೆ ಆರೋಪಿಗಳಾದ ಸಲ್ಮಾನ್ ಮತ್ತು ಮುಖ್ತಾರ್ ಕಾಲುಗಳಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು.
ಇವರಿಬ್ಬರು ನೀಡಿದ ಸುಳಿವಿನ ಆಧಾರದಲ್ಲಿ ತಾಲಿಬ್ ಬಂಧನ ಕಾರ್ಯಾಚರಣೆ ನಡೆಸಲಾಗಿತ್ತು, ಈ ವೇಳೆ ಆತ ಪೊಲೀಸರ ಮೇಲೆ ಗುಂಡು ಹಾರಿಸಿದ್ದು ಈ ವೇಳೆ ಎನ್ಕೌಂಟರ್ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ದೇಶದಲ್ಲಿ ಹೆಚ್ಚುತ್ತಿರುವ ಎನ್ಕೌಂಟರ್ ಪ್ರಕರಣಗಳು
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ತಜ್ಞರು ಮತ್ತು ವಿವಿಧ ಮಾನವ ಹಕ್ಕುಗಳ ಸಂಸ್ಥೆಗಳು ಭಾರತದಲ್ಲಿ ಹೆಚ್ಚುತ್ತಿರುವ ಎನ್ಕೌಂಟರ್ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿವೆ. ಇವು ಸಂವಿಧಾನದ 21ನೇ ವಿಧಿಯಡಿ (ಬದುಕುವ ಹಕ್ಕು) ದೊರೆಯುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಭಯೋತ್ಪಾದನೆ-ನಿಗ್ರಹ ಕಾರ್ಯಾಚರಣೆ ಸೇರಿದಂತೆ ಯಾವುದೇ ಸಂದರ್ಭದಲ್ಲಿ, ಭಾರತ ಸರ್ಕಾರವು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನು ಮತ್ತು ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ವಿಶ್ವಸಂಸ್ಥೆಯು ಒತ್ತಾಯಿಸಿದೆ.
ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಎನ್ಕೌಂಟರ್ ನಡೆಸಿ ಕಾಮುಕನ ಬಂಧನ
ಹಾಗೆಯೇ ಎನ್ಕೌಂಟರ್ಗಳಲ್ಲಿನ ಸಾವುಗಳ ಬಗ್ಗೆ ಸ್ವತಂತ್ರ ಮತ್ತು ಪಾರದರ್ಶಕ ತನಿಖೆ ನಡೆಸಬೇಕು ಎಂದು ವಿಶ್ವಸಂಸ್ಥೆ ಸೂಚಿಸಿದೆ. “ನಕಲಿ ಎನ್ಕೌಂಟರ್ಗಳು ನ್ಯಾಯಬಾಹಿರ ಹತ್ಯೆಗಳಾಗಿದ್ದು ಇವುಗಳನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗದು. ಅಪರಾಧದ ಸ್ವರೂಪ ಏನೇ ಇರಲಿ, ಕಾನೂನಿನ ಪ್ರಕ್ರಿಯೆಯನ್ನು ಮೀರುವುದು ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಧಕ್ಕೆ ತರುತ್ತದೆ” ಎಂದು ಈ ಹಿಂದೆ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಪೀಠವು ಹೇಳಿತ್ತು. ಸುಪ್ರೀಂ ಕೋರ್ಟ್ ನೀಡಿದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಭಾರತ ಸರ್ಕಾರಕ್ಕೆ ವಿಶ್ವಸಂಸ್ಥೆ ಮನವಿ ಮಾಡಿದೆ.
ಇನ್ನು 2025ರಲ್ಲಿ ಉತ್ತರ ಪ್ರದೇಶದಲ್ಲಿ 2,500ಕ್ಕೂ ಹೆಚ್ಚು ಎನ್ಕೌಂಟರ್ಗಳನ್ನು ಪೊಲೀಸರು ನಡೆಸಿದ್ದಾರೆ. ಇವುಗಳಲ್ಲಿ 48 ಆರೋಪಿಗಳು ಸಾವನ್ನಪ್ಪಿದ್ದಾರೆ. 2017ರಿಂದ ಈವರೆಗೆ 266 ಆರೋಪಿಗಳು ಪೊಲೀಸ್ ಎನ್ಕೌಂಟರ್ಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಡಿಜಿಪಿ ರಾಜೀವ್ ಕೃಷ್ಣ ತಿಳಿಸಿದ್ದಾರೆ.





